ಬೀದರ್: ‘ಸಾರ್ವಜನಿಕರಿಗೆ ಜಮೀನಿನ ದಾಖಲೆಪತ್ರಗಳು ಸುಲಭವಾಗಿ ದೊರಕುವಂತಾಗಲು ಒಂದು ತಿಂಗಳಲ್ಲಿ ಭೂ ಪರಿವರ್ತನೆ ಕಾಯ್ದೆಗೆ ತಿದ್ದುಪಡಿ ತರಲಾಗುವುದು’ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.
ಔರಾದ್ ತಾಲ್ಲೂಕಿನ ವಡಗಾಂವ(ಡಿ) ಗ್ರಾಮದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೃಷಿ ಜಮೀನನ್ನು ಕೃಷಿಯೇತರ ಜಮೀನಾಗಿ ಪರಿವರ್ತಿಸಲು ಸಮಸ್ಯೆಗಳಿವೆ. 79ಎ,ಬಿ ತೆಗೆದು ಮಧ್ಯವರ್ತಿಗಳ ಹಾವಳಿ ತಡೆಯುವುದರ ಜೊತೆಗೆ ವಿಳಂಬ ಆಗುವುದು ತಪ್ಪಿಸಲಾಗುವುದು’ ಎಂದರು.
‘ಕಂದಾಯ ಕಚೇರಿಗಳಲ್ಲಿ ಬಾಕಿ ಉಳಿದ ಕಡತಗಳ ವಿಲೇವಾರಿಗೆ ಜಿಲ್ಲಾಧಿಕಾರಿಗೆ ಎರಡು ವಾರ ಅವಕಾಶ ಕೊಡಲಾಗಿದೆ. ಚಿತ್ರದುರ್ಗದಲ್ಲಿ 50 ವರ್ಷಗಳಿಂದ ಭೂಮಿ ಉಳುಮೆ ಮಾಡುತ್ತಿರುವವರಿಗೆ ಮಾಲೀಕತ್ವ ವಹಿಸಿ ಕೊಡಲಾಗುವುದು. ಇದಕ್ಕಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುವುದು’ ಎಂದು ಅವರು ತಿಳಿಸಿದರು.
‘ಜಿಲ್ಲಾಧಿಕಾರಿ ಪ್ರತಿ ಶನಿವಾರ ಒಂದು ತಾಲ್ಲೂಕು ಕಚೇರಿಗೆ ಹೋಗಬೇಕು. ಬೆಳಿಗ್ಗೆ 10 ರಿಂದ ಮಧ್ಯಾಹ್ನ 12ರವರೆಗೆ ತಾಲ್ಲೂಕು ಕಚೇರಿಯಲ್ಲೇ ಉಳಿದು ಜನರ ಸಮಸ್ಯೆಗೆ ಸ್ಪಂದಿಸಬೇಕೆಂದು ಸೂಚಿಸಲಾಗಿದೆ’ ಎಂದು ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.