ADVERTISEMENT

ಅನುಭವ ಮಂಟಪದ ಟೆಂಡರ್ ಪ್ರಕ್ರಿಯೆ ಶೀಘ್ರ: ಬಿ.ವೈ.ವಿಜಯೇಂದ್ರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 10:39 IST
Last Updated 13 ನವೆಂಬರ್ 2020, 10:39 IST
ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ   

ಬಸವಕಲ್ಯಾಣ: ‘ಬಸವಾದಿ ಶರಣರ ಕುರುಹಾದ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ₹ 500 ಕೋಟಿ ಅನುದಾನ ಒದಗಿಸಿದ್ದು, ಕಟ್ಟಡ ಕಾಮಗಾರಿಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ’ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಇಲ್ಲಿನ ಅನುಭವ ಮಂಟಪದಲ್ಲಿ ಶುಕ್ರವಾರ ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ವತಿಯಿಂದ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸರ್ಕಾರ, ಮಂಟಪದ ಕಾಮಗಾರಿಗೆ ತಕ್ಷಣ ₹ 10 ಕೋಟಿ ಬಿಡುಗಡೆ ಮಾಡಲಿದೆ. ಈಗಾಗಲೇ ಹಿರಿಯ ಐಎಎಸ್ ಅಧಿಕಾರಿ ಡಾ.ಎಚ್.ಆರ್.ಮಹಾದೇವ ಅವರನ್ನು ಮಂಡಳಿ ವಿಶೇಷಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. 50 ಎಕರೆ ಜಮೀನನ್ನು ಅನುಭವ ಮಂಟಪಕ್ಕೆ ವರ್ಗಾಯಿಸುವ ಕಾರ್ಯ ನಡೆದಿದೆ’ ಎಂದು ತಿಳಿಸಿದರು.

‘ಕರ್ನಾಟಕ ಅಂದರೆ ಸಮಾನತೆಯ ನಾಡು. ಇದು ಮಠಗಳ ನಾಡು ಕೂಡ ಅಗಿದೆ. ಮಠಗಳು ಅನ್ನ, ಜ್ಞಾನ ದಾಸೋಹದ ಕೇಂದ್ರಗಳಾಗಿ ಗುರುತಿಸಿಕೊಂಡಿವೆ. ತಂದೆಯವರಾದ ಯಡಿಯೂರಪ್ಪ ಅವರಂತೆ ರಾಜಕೀಯದಲ್ಲಿ ಪಾಲ್ಗೊಳ್ಳುವ ಮೂಲಕ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದೇನೆ. ಅದಕ್ಕೆ ಮಠಾಧೀಶರ ಆಶೀರ್ವಾದ ಬೇಕು’ ಎಂದು ಮನವಿ ಮಾಡಿದರು.

ADVERTISEMENT

ಮರಾಠಾ ಸಮಾಜದ ಮುಖಂಡರ ಸಭೆಯಲ್ಲಿ ಪಾಲ್ಗೊಳ್ಳುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಅವರು, ‘ಇದು ಪೂರ್ವನಿರ್ಧಾರಿತ ಅಲ್ಲ. ಅನುಭವ ಮಂಟಪದ ದರ್ಶನ ಪಡೆಯಲು ಸಹಜವಾಗಿ ಬಸವಕಲ್ಯಾಣಕ್ಕೆ ಬಂದಿದ್ದೇನೆ’ ಎಂದು ತಿಳಿಸಿದರು.

ಭಾಲ್ಕಿ ಬಸವಲಿಂಗ ಪಟ್ಟದ್ದೇವರು ಮಾತನಾಡಿದರು. ಬೀದರ್ ಸಂಸದ ಭಗವಂತ ಖೂಬಾ, ಕಲಬುರ್ಗಿ ಸಂಸದ ಡಾ.ಉಮೇಶ ಜಾಧವ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ, ವಿಧಾನಪರಿಷತ್ ಸದಸ್ಯ ಶಶಿಲ್ ನಮೋಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.