ADVERTISEMENT

ಬೀದರ್: ಸೇನಾ ಭರ್ತಿ ಪೂರ್ವ ಸಿದ್ಧತಾ ಶಿಬಿರ ಸೆ. 26 ರಿಂದ

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ 250 ಅಭ್ಯರ್ಥಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 13:00 IST
Last Updated 23 ಸೆಪ್ಟೆಂಬರ್ 2022, 13:00 IST
ಸೇನಾ ಭರ್ತಿ ಪೂರ್ವ ಸಿದ್ಧತಾ ತರಬೇತಿ ನಡೆಯಲಿರುವ ಬೀದರ್ ತಾಲ್ಲೂಕಿನ ಕೊಳಾರ(ಕೆ) ಕೈಗಾರಿಕಾ ಪ್ರದೇಶದ ‘ಮಿಲಿಟರಿ ಕ್ಯಾಂಪ್’ ಸ್ಥಳಕ್ಕೆ ಕಲ್ಯಾಣ ಕರ್ನಾಟಕ ಮಾನವ, ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಭೇಟಿ ನೀಡಿದರು
ಸೇನಾ ಭರ್ತಿ ಪೂರ್ವ ಸಿದ್ಧತಾ ತರಬೇತಿ ನಡೆಯಲಿರುವ ಬೀದರ್ ತಾಲ್ಲೂಕಿನ ಕೊಳಾರ(ಕೆ) ಕೈಗಾರಿಕಾ ಪ್ರದೇಶದ ‘ಮಿಲಿಟರಿ ಕ್ಯಾಂಪ್’ ಸ್ಥಳಕ್ಕೆ ಕಲ್ಯಾಣ ಕರ್ನಾಟಕ ಮಾನವ, ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಭೇಟಿ ನೀಡಿದರು   

ಬೀದರ್: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭ್ಯರ್ಥಿಗಳ ಸೇನಾ ಭರ್ತಿ ಪೂರ್ವ ಸಿದ್ಧತಾ ಶಿಬಿರ ಬೀದರ್ ತಾಲ್ಲೂಕಿನ ಕೊಳಾರ(ಕೆ) ಕೈಗಾರಿಕಾ ಪ್ರದೇಶದಲ್ಲಿ ಇರುವ ‘ಮಿಲಿಟರಿ ಕ್ಯಾಂಪ್’ನಲ್ಲಿ ಸೆ. 26 ರಿಂದ ಆರಂಭಗೊಳ್ಳಲಿದೆ.

90 ದಿನಗಳ ವಸತಿ ಸಹಿತ ತರಬೇತಿಗೆ ಬೀದರ್, ಕಲುಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳ 250 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.

ಗ್ಲೊಬಲ್ ಸೈನಿಕ ಅಕಾಡೆಮಿಯ ಅಧ್ಯಕ್ಷ ನಿವೃತ್ತ ಕರ್ನಲ್ ಶರಣಪ್ಪ ಸಿಕೇನಪುರ ಅವರ ನೇತೃತ್ವದಲ್ಲಿ ನಡೆಯಲಿರುವ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಸಶಸ್ತ್ರ ಪಡೆ, ಅರೆ ಸೇನಾ ಪಡೆಗಳ ಪೂರ್ವ ಸಿದ್ಧತಾ ತರಬೇತಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಎರಡನೇ ತಂಡದ ತರಬೇತಿಗೆ ಈಗಾಗಲೇ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಕಲ್ಯಾಣ ಕರ್ನಾಟಕ ಭಾಗದ ಹೆಚ್ಚಿನ ಅಭ್ಯರ್ಥಿಗಳಿಗೆ ಸೇನೆ ಸೇರ್ಪಡೆಗೆ ನೆರವಾಗುವುದು ತರಬೇತಿಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಕ್ಯಾಂಪ್‍ಗೆ ಭೇಟಿ: ಸೇನಾ ಪೂರ್ವ ಸಿದ್ಧತಾ ತರಬೇತಿ ಸ್ಥಳಕ್ಕೆ ರೇವಣಸಿದ್ದಪ್ಪ ಜಲಾದೆ ಅವರು ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.

ಉಸ್ತುವಾರಿ ಸಚಿವರಿಂದ ಉದ್ಘಾಟನೆ:ಸೆ. 26 ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸೇನಾ ಭರ್ತಿ ಪೂರ್ವಸಿದ್ಧತಾ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ.

ಕೇಂದ್ರದ ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪುರೆ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಸೇಡಂ ಘನ ಉಪಸ್ಥಿತಿ, ಶಾಸಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆ ವಹಿಸುವರು.


ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಶಾಸಕರಾದ ರಾಜಶೇಖರ ಪಾಟೀಲ, ಈಶ್ವರ ಖಂಡ್ರೆ, ರಹೀಂಖಾನ್, ಶರಣು ಸಲಗರ್, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಶಶೀಲ್ ನಮೋಶಿ, ಭೀಮರಾವ್ ಪಾಟೀಲ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫೊದ್ದಿನ್ ಕಚೇರಿವಾಲೆ, ರಾಜ್ಯ ಮರಾಠ ನಿಗಮದ ಅಧ್ಯಕ್ಷ ಎಂ.ಜಿ. ಮುಳೆ, ಸಂಘದ ಶಿಕ್ಷಣ, ಕಲೆ ಮತ್ತು ಸಾಂಸ್ಕೃತಿಕ ಉಪ ಸಮಿತಿಯ ಅಧ್ಯಕ್ಷೆ ಲೀಲಾ ಎಂ. ಕಾರಟಗಿ, ಬಿಡಿಎ ಅಧ್ಯಕ್ಷ ಬಾಬುವಾಲಿ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರಬಾಬು, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಎಂ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಬೀದರ್ ವಾಯುಪಡೆ ತರಬೇತಿ ಕೇಂದ್ರದ ಮುಖ್ಯ ಆಡಳಿತಾತ್ಮಕ ಅಧಿಕಾರಿ ಗ್ರುಪ್ ಕ್ಯಾಪ್ಟನ್ ರಿತೇಶ ಶರ್ಮಾ ಅವರು ಅಗ್ನಿವೀರ ಯೋಜನೆ ಕುರಿತು ಮಾಹಿತಿ ನೀಡುವರು.

ಉದ್ಯಮಿ ಬಸವರಾಜ ಧನ್ನೂರ, ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ ಸರ್ದಾರ್ ಬಲಬೀರ್‍ಸಿಂಗ್ ಉಪಸ್ಥಿತರಿರುವರು ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.