ADVERTISEMENT

ಕುವೈತ್‍ನಲ್ಲಿ ಸಿಲುಕಿದ ಜಿಲ್ಲೆಯ 195 ಜನ: ಶೀಘ್ರ ತಾಯ್ನಾಡಿಗೆ ಕರೆ ತರಲು ಯತ್ನ

ಕುವೈತ್‍ನಲ್ಲಿ ಸಿಲುಕಿದ ಜಿಲ್ಲೆಯ 195 ಜನ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 16:07 IST
Last Updated 3 ಆಗಸ್ಟ್ 2020, 16:07 IST
ಭಗವಂತ ಖೂಬಾ
ಭಗವಂತ ಖೂಬಾ   

ಬೀದರ್: ಉದ್ಯೋಗ ಅರಸಿ ಹೋಗಿ ಕೋವಿಡ್ ಕಾರಣ ಕುವೈತ್‌ನಲ್ಲಿ ಸಿಲುಕಿಕೊಂಡಿರುವ ಜಿಲ್ಲೆಯ 195 ಜನರನ್ನು ಆದಷ್ಟು ಬೇಗ ತಾಯ್ನಾಡಿಗೆ ಕರೆ ತರಲು ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

ವಿಷಯ ಕೇಂದ್ರ ವಿದೇಶಾಂಗ ಸಚಿವರ ಗಮನಕ್ಕೆ ತರಲಾಗಿದೆ. ನಾಗರಿಕ ವಿಮಾನಯಾನ ಸಚಿವರಿಗೂ ಪತ್ರ ಬರೆಯಲಾಗಿದೆ. ವಿದೇಶಾಂಗ ಸಚಿವಾಲಯದಲ್ಲಿನ ಈ ಕುರಿತ ಬೆಳವಣಿಗೆಗಳ ಮೇಲೆ ನಿರಂತರ ನಿಗಾ ಇರಿಸಲಾಗಿದೆ ಎಂದು ಹೇಳಿದ್ದಾರೆ.

ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಈಗಾಗಲೇ ಕುವೈತ್‍ನಲ್ಲಿ ಸಿಲುಕಿರುವ ಜಿಲ್ಲೆಯ ಯುವಕರನ್ನು ಸಂಪರ್ಕಿಸಿದ್ದಾರೆ. ಅಲ್ಲಿನ ಭಾರತದ ರಾಯಭಾರ ಕಚೇರಿಗೆ ತೆರಳಿ ವಿವರ ನೀಡುವಂತೆಯೂ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ಸಂಸದನಾಗಿ ಕ್ಷೇತ್ರದ ಯುವಕರನ್ನು ಕರೆ ತರುವ ದಿಸೆಯಲ್ಲಿ ಎಲ್ಲ ಪ್ರಯತ್ನ ನಡೆಸುತ್ತಿದ್ದೇನೆ. ಈ ವಿಷಯದಲ್ಲಿ ರಾಜಕೀಯ ಮಾಡಬಾರದು ಎನ್ನುವ ಕಾರಣಕ್ಕೆ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಕೆಪಿಸಿಸಿ ಕಾರ್ಯಾಧ್ಯಕ್ಷರು ಇದರಲ್ಲಿ ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಯುವಕರನ್ನು ಕರೆತರುವ ಯಾವ ಕೆಲಸವೂ ಮಾಡದೆ, ಇಲ್ಲಸಲ್ಲದ ಹೇಳಿಕೆ ನೀಡಿ, ಯುವಕರಲ್ಲಿ ಭಯ ಹುಟ್ಟುವಂತೆ ಮಾಡುತ್ತಿದ್ದಾರೆ. ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈವರೆಗೆ ವಿದೇಶದಿಂದ ಸಾವಿರಾರು ಜನರನ್ನು ಮರಳಿ ಕರೆ ತಂದಿದ್ದೇನೆ. ಕುವೈತ್‍ನಲ್ಲಿ ಸಿಲುಕಿಕೊಂಡವರನ್ನೂ ಆದಷ್ಟು ಬೇಗ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.