ADVERTISEMENT

ತಂಗುದಾಣ ಪ್ರಯಾಣಿಕ ಸ್ನೇಹಿಯಾಗಲಿ: ಸಮೀಕ್ಷಾ ವರದಿ

‘ಬಿ ಪ್ಯಾಕ್‌’ ಸಾರ್ವಜನಿಕ ಸ್ಥಳಗಳ ಸುರಕ್ಷತಾ ಸಮೀಕ್ಷಾ ವರದಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 22:13 IST
Last Updated 19 ಮಾರ್ಚ್ 2022, 22:13 IST
ನಗರದಲ್ಲಿ ಸಾರ್ವಜನಿಕ ಸ್ಥಳಗಳ ಸುರಕ್ಷತಾ ಸಮೀಕ್ಷಾ ವರದಿಯನ್ನು ಶಾಸಕ ಅರವಿಂದ ಲಿಂಬಾವಳಿ ಅವರು ಶನಿವಾರ ಬಿಡುಗಡೆ ಮಾಡಿದರು. ‘ಬಿ ಸೇಫ್‌’ ಕಾರ್ಯಕ್ರಮದ ಮುಖ್ಯಸ್ಥೆ ಚಿತ್ರಾ ತಳವಾರ, ಸಿಇಒ ಮತ್ತು ಮ್ಯಾನೇಜಿಂಗ್‌ ಟ್ರಸ್ಟಿ ರೇವತಿ ಅಶೋಕ್‌, ಸಿಜಿಐ ಹಿರಿಯ ಉಪಾಧ್ಯಕ್ಷ ರಾಹುಲ್‌ ಘೋಡ್ಕೆ, ಜನಾಗ್ರಹದ ನಾಗರಿಕ ಸಹಭಾಗಿತ್ವ ವಿಭಾಗದ ಮುಖ್ಯಸ್ಥೆ ಸಪ್ನಾ ಕರೀಂ, ನಟಿ ಪ್ರಣೀತಾ ಸುಭಾಷ್ ಇದ್ದರು – ಪ್ರಜಾವಾಣಿ ಚಿತ್ರ
ನಗರದಲ್ಲಿ ಸಾರ್ವಜನಿಕ ಸ್ಥಳಗಳ ಸುರಕ್ಷತಾ ಸಮೀಕ್ಷಾ ವರದಿಯನ್ನು ಶಾಸಕ ಅರವಿಂದ ಲಿಂಬಾವಳಿ ಅವರು ಶನಿವಾರ ಬಿಡುಗಡೆ ಮಾಡಿದರು. ‘ಬಿ ಸೇಫ್‌’ ಕಾರ್ಯಕ್ರಮದ ಮುಖ್ಯಸ್ಥೆ ಚಿತ್ರಾ ತಳವಾರ, ಸಿಇಒ ಮತ್ತು ಮ್ಯಾನೇಜಿಂಗ್‌ ಟ್ರಸ್ಟಿ ರೇವತಿ ಅಶೋಕ್‌, ಸಿಜಿಐ ಹಿರಿಯ ಉಪಾಧ್ಯಕ್ಷ ರಾಹುಲ್‌ ಘೋಡ್ಕೆ, ಜನಾಗ್ರಹದ ನಾಗರಿಕ ಸಹಭಾಗಿತ್ವ ವಿಭಾಗದ ಮುಖ್ಯಸ್ಥೆ ಸಪ್ನಾ ಕರೀಂ, ನಟಿ ಪ್ರಣೀತಾ ಸುಭಾಷ್ ಇದ್ದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ಮಹದೇವಪುರ ಮತ್ತು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರಗಳಲ್ಲಿನ ಬಸ್‌ ತಂಗುದಾಣಗಳು ಪ್ರಯಾಣಿಕ ಸ್ನೇಹಿಯಾಗಬೇಕು ಮತ್ತು ಬೀದಿ ದೀಪಗಳಂತಹ ಮೂಲಸೌಕರ್ಯವನ್ನು ಸುಧಾರಿಸಬೇಕು ಎಂದು ಸಾರ್ವಜನಿಕ ಸ್ಥಳಗಳ ಸುರಕ್ಷತಾ ಸಮೀಕ್ಷಾ ವರದಿಯಲ್ಲಿ ಸಲಹೆ ನೀಡಲಾಗಿದೆ.

ಬೆಂಗಳೂರು ರಾಜಕೀಯ ಕ್ರಿಯಾಸಮಿತಿ (ಬಿ–ಪ್ಯಾಕ್‌) ಮತ್ತು ಸಿಜಿಐ ಸಂಸ್ಥೆಗಳು ಈ ವರದಿಯನ್ನು ಸಿದ್ಧಪಡಿಸಿವೆ.

ಬಸ್‌ ನಿಲ್ದಾಣಗಳಲ್ಲಿ ಮಾಹಿತಿ ವ್ಯವಸ್ಥೆ, ನಕ್ಷೆ ವಿವರ ಹಾಗೂ ಉತ್ತಮ ಗುಣಮಟ್ಟದ ಆಸನ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಉತ್ತಮ ಬೆಳಕಿನ ವ್ಯವಸ್ಥೆ ಇರಬೇಕು. ಪಾದಚಾರಿ ಮಾರ್ಗಗಳನ್ನೂ ಸುಧಾರಿಸಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

ಉದ್ಯಾನಗಳು, ಅಂಗನವಾಡಿಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸಬೇಕು. ಇದರಿಂದ, ಮಕ್ಕಳ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಲಾಗಿದೆ.

ಈ ವರದಿಯನ್ನು ಶಾಸಕ ಅರವಿಂದ ಲಿಂಬಾವಳಿ ಅವರು ಶನಿವಾರ ಬಿಡುಗಡೆ ಮಾಡಿದರು. ಈ ಎರಡು ಕ್ಷೇತ್ರಗಳಲ್ಲಿನ 260 ಸಾರ್ವಜನಿಕ ಸ್ಥಳಗಳಲ್ಲಿ ಸಮೀಕ್ಷೆಯನ್ನು ವರದಿಯು ಒಳಗೊಂಡಿದೆ.

ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣದ ಕುರಿತ ಅಂಶಗಳ ಬಗ್ಗೆಯೂ ವಿಶ್ಲೇಷಿಸಲಾಗಿದೆ. 23 ಅಂಗನವಾಡಿ ಕೇಂದ್ರಗಳು, 71 ಬಸ್‌ ನಿಲ್ದಾಣಗಳು, 30 ಮಾರುಕಟ್ಟೆಗಳು, 37 ಉದ್ಯಾನಗಳು, 14 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 12 ಪೊಲೀಸ್‌ ಠಾಣೆಗಳು, 32 ಸಾರ್ವಜನಿಕ ಶೌಚಾಲಯಗಳ ಬಗ್ಗೆ ಸಮೀಕ್ಷೆ ನಡೆಸಲಾಗಿದೆ ಎಂದು ವಿವರಿಸಲಾಗಿದೆ.

ಮಹದೇವಪುರ ವಿಧಾನಸಭಾ ಕ್ಷೇತ್ರದ ಎಂಟು ವಾರ್ಡ್‌ಗಳು ಮತ್ತು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಏಳು ವಾರ್ಡ್‌ಗಳಲ್ಲಿ ಈ ಸಮೀಕ್ಷೆ ಕೈಗೊಳ್ಳಲಾಗಿತ್ತು. ವರದಿಯಲ್ಲಿನ ಶಿಫಾರಸ್ಸುಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಿದರೆ ಎರಡು ಕ್ಷೇತ್ರಗಳು ಮಹಿಳಾ ಸಬಲೀಕರಣ ಮತ್ತು ಸುರಕ್ಷತೆಯ ವಿಷಯದಲ್ಲಿ ಮಾದರಿಯಾಗುತ್ತವೆ ಎಂದು ತಿಳಿಸಲಾಗಿದೆ.

‘ಬೀದಿ ದೀಪಗಳಿಗೆ ಆದ್ಯತೆ ನೀಡಬೇಕು’
‘ಬೀದಿ ದೀಪಗಳನ್ನು ಅಳವಡಿಸಲು ಬಿಬಿಎಂಪಿ ಆದ್ಯತೆ ನೀಡಬೇಕು. ಬೀದಿ ದೀಪಗಳು ಇಲ್ಲದ ಕಾರಣ ಅಪಘಾತಗಳು ಸಂಭವಿಸುತ್ತಿವೆ. ಜತೆಗೆ, ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದಲೂ ಮುಖ್ಯವಾಗಿದೆ’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್‌ ರವಿಕಾಂತೇಗೌಡ ಹೇಳಿದರು.

ಸುರಕ್ಷಿತ ಸಾರ್ವಜನಿಕ ಸ್ಥಳಗಳು ಕುರಿತ ಬಿ ಪ್ಯಾಕ್‌ ಆಯೋಜಿಸಿದ್ದ ಚರ್ಚೆಯಲ್ಲಿ ಮಾತನಾಡಿದ ಅವರು, ‘ಕಾಲಕ್ಕೆ ತಕ್ಕಂತೆ ಪೊಲೀಸ್‌ ಇಲಾಖೆಯೂ ಹಲವಾರು ಬದಲಾವಣೆಗಳನ್ನು ಕಾಣುತ್ತಿದೆ. ಬೇರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಪೊಲೀಸರು ಶೀಘ್ರವಾಗಿ ಸ್ಪಂದಿಸುತ್ತಿದ್ದಾರೆ’ ಎಂದು ಹೇಳಿದರು.

‘ಕಷ್ಟಗಳು ಬಂದಾಗ ಜನರು ಮೊದಲು ಪೊಲೀಸರನ್ನು ನೆನಪಿಸಿಕೊಳ್ಳುತ್ತಾರೆ. ಬೀಟ್‌ ವ್ಯವಸ್ಥೆಯನ್ನು ಜನಸ್ನೇಹಿ ಮಾಡಲಾಗುತ್ತಿದ್ದು, ನಾಗರಿಕರನ್ನು ಸಹ ಸೇರಿಸಿಕೊಳ್ಳಲಾಗುತ್ತಿದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.