
ಬಕ್ರೀದ್ ಹಬ್ಬವನ್ನು ಮುಸ್ಲಿಮರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಸೋಮವಾರ ಆಚರಿಸಿದರು.
ಬೀದರ್: ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಮರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಸೋಮವಾರ ಆಚರಿಸಿದರು.
ಬಿಳಿವಸ್ತ್ರಗಳನ್ನು ಧರಿಸಿ, ತಲೆಯ ಮೇಲೆ ಟೋಪಿ ಧರಿಸಿದ ನೂರಾರು ಮುಸ್ಲಿಮರು ಈದ್ಗಾ ಮೈದಾನಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಮಾಡಿ, ನಾಡಿನಲ್ಲಿ ಮಳೆ, ಬೆಳೆಯಾಗಲೆಂದು ಸಮೃದ್ಧಿಗೆ ಪ್ರಾರ್ಥಿಸಿದರು.
ನಗರದ ವಿವಿಧ ಬಡಾವಣೆಗಳಲ್ಲಿ ನೆಲೆಸಿರುವ ಮುಸ್ಲಿಮರು ನಗರದ ಕೇಂದ್ರ ಬಸ್ ನಿಲ್ದಾಣ ಎದುರಿನ ಈದ್ಗಾ ಮೈದಾನಕ್ಕೆ ತೆರಳಿ, ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಮುಸ್ಲಿಂ ಧರ್ಮಗುರುಗಳ ಪ್ರವಚನ ಆಲಿಸಿದರು. ನಗರ ಹೊರವಲಯದ ಶಹಾಪುರ ಗೇಟ್, ಅಮಲಾಪುರ, ಚಿಟ್ಟಾವಾಡಿ ಸೇರಿದಂತೆ ಜಿಲ್ಲೆಯಾದ್ಯಂತ ಇದೇ ದೃಶ್ಯ ಕಂಡು ಬಂತು.
ಸಾಮೂಹಿಕ ಪ್ರಾರ್ಥನೆ ನಂತರ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಪೌರಾಡಳಿತ ಸಚಿವ ರಹೀಂ ಖಾನ್, ನಗರಸಭೆ ಸದಸ್ಯ ಮೊಹಮ್ಮದ್ ಗೌಸ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು. ಇತರೆ ಸಮುದಾಯದ ಗಣ್ಯರು ಮುಸ್ಲಿಮರಿಗೆ ಶುಭ ಕೋರಿದರು. ಪ್ರಾರ್ಥನೆ ಹಿನ್ನೆಲೆಯಲ್ಲಿ ಈದ್ಗಾ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಪ್ರಾರ್ಥನೆಗೆ ತೆರಳುವ ವೇಳೆ ಹಾಗೂ ಮುಗಿಸಿಕೊಂಡು ಹಿಂತಿರುಗುವ ವೇಳೆ ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.