ADVERTISEMENT

ಬಸವಕಲ್ಯಾಣ ಉಪ ಚುನಾವಣೆ: ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

ಎರಡನೇ ಹಂತದ ಪೂರ್ವಭಾವಿ ಚುನಾವಣಾ ತರಬೇತಿ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 15:16 IST
Last Updated 14 ಏಪ್ರಿಲ್ 2021, 15:16 IST
ಬೀದರ್‌ನ ಜಿಲ್ಲಾ ರಂಗ ಮಂದಿರದಲ್ಲಿ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗೆ ಆಯೋಜಿಸಿದ್ದ ಎರಡನೇ ಹಂತದ ಪೂರ್ವಭಾವಿ ಚುನಾವಣಾ ತರಬೇತಿಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್  ಮಾತನಾಡಿದರು
ಬೀದರ್‌ನ ಜಿಲ್ಲಾ ರಂಗ ಮಂದಿರದಲ್ಲಿ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗೆ ಆಯೋಜಿಸಿದ್ದ ಎರಡನೇ ಹಂತದ ಪೂರ್ವಭಾವಿ ಚುನಾವಣಾ ತರಬೇತಿಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್  ಮಾತನಾಡಿದರು   

ಬೀದರ್‌: ‘ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಯಾವುದೇ ರೀತಿಯ ಲೋಪಗಳು ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌ ಹೇಳಿದರು.

ನಗರದ ಚೆನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಗೆ ಆಯೋಜಿಸಿದ್ದ ಎರಡನೇ ಹಂತದ ಪೂರ್ವಭಾವಿ ಚುನಾವಣಾ ತರಬೇತಿಯಲ್ಲಿ ಅವರು ಮಾತನಾಡಿದರು.

‘ಏಪ್ರಿಲ್ 17ರಂದು ಬೆಳಿಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಮತದಾನ ನಡೆಯಲಿದೆ. ಬೆಳಿಗ್ಗೆ 6.30ರೊಳಗೆ ಕನಿಷ್ಠ 50 ಮತಗಳಿಂದ ಅಣಕು ಮತದಾನ ಮುಗಿಸಿದ ಬಳಿಕ 7 ಗಂಟೆಗೆ ಮತದಾನ ಪ್ರಾರಂಭಿಸಬೇಕು. ನಿಗದಿತ ಸಮಯದಲ್ಲಿ ಮತದಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು’ ಎಂದು ಸೂಚನೆ ನೀಡಿದರು.

ADVERTISEMENT

‘ವಿವಿಪ್ಯಾಟ್ ಯಂತ್ರ ಸಾಗಿಸುವಾಗ ಹಾಗೂ ವಿವಿಪ್ಯಾಟ್ ಯಂತ್ರ ಬಳಸುವಾಗ ವಿಶೇಷ ಗಮನ ಹರಿಸಬೇಕು. ಚುನಾವಣೆಯಲ್ಲಿ ಬಳಸುವ ಬ್ಯಾಲೆಟ್ ಯುನಿಟ್, ವಿವಿಪ್ಯಾಟ್ ಯುನಿಟ್ ಮತ್ತು ಕಂಟ್ರೋಲ್ ಯುನಿಟ್‍ಗಳ ಬಳಕೆಯ ಬಗ್ಗೆ ಸರಿಯಾಗಿ ತಿಳಿದುಕೊಳ್ಳಬೇಕು’ ಎಂದು ಹೇಳಿದರು.

‘ಬ್ಯಾಲೆಟ್ ಯುನಿಟ್‍ನಲ್ಲಿ ಅಳವಡಿಸಿರುವ ಮತಪತ್ರ ಸರಿಯಾಗಿ ಪಂಕ್ತಿಕರಣಗೊಳಿಸಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಬ್ಯಾಲೆಟ್ ಯುನಿಟ್‍ನಲ್ಲಿ ಕಾಣುವ ಉಮೇದುವಾರರ ಬಟನ್‍ಗಳು ಸ್ಪರ್ಧಾ ಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆಗೆ ಸಮಾನವಾಗಿರಬೇಕು’ ತಿಳಿಸಿದರು.

‘ಚುನಾವಣಾ ಸಾಮಗ್ರಿಗಳನ್ನು ಸರಿಯಾಗಿ ಪರಿಶೀಲಿಸಿ ಕೊಂಡೊಯ್ಯಬೇಕು. ಅಳಿಸಲಾಗದ ಶಾಯಿ ಮತ್ತು ಸ್ಟ್ಯಾಂಪ್ ಪ್ಯಾಡ್, ಟೆಂಡರ್ಡ್ ಮತಪತ್ರಗಳ ಕ್ರಮ ಸಂಖ್ಯೆಗಳು ಮತ್ತು ಯಾವುದೇ ರೀತಿ ದೋಷಪೂರ್ಣವಾಗಿಲ್ಲ ಎನ್ನುವುದನ್ನು ಪರಿಶೀಲಿಸಬೇಕು. ಸ್ಪರ್ಧಾ ಕಣದಲ್ಲಿರುವ ಉಮೇದುವಾರರ ಚುನಾವಣಾ ಏಜೆಂಟರ ಮಾದರಿ ಸಹಿಯ ಪ್ರತಿಗಳು ಪಡೆದಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು’ ಎಂದು ಹೇಳಿದರು.

ರಾಜ್ಯಮಟ್ಟದ ಚುನಾವಣಾ ಮಾಸ್ಟರ್ ಟ್ರೇನರ್ ಗೌತಮ ಅರಳಿ ಅವರು ಮತಗಟ್ಟೆ ಅಧಿಕಾರಿಗಳು ನಿರ್ವಹಿಸಬೇಕಿರುವ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬಸವಕಲ್ಯಾಣ ಉಪ ಆಯುಕ್ತ ಭುವನೇಶ ಪಾಟೀಲ, ತಹಶೀಲ್ದಾರ್ ಗಂಗಾದೇವಿ ಸಿ.ಎಚ್., ಚುನಾವಣಾ ಶಾಖೆಯ ಶಾಂತನು ಪೂರಂ ಇದ್ದರು.

ಬೀದರ್‌ನ ಜಿಲ್ಲಾ ರಂಗ ಮಂದಿರದಲ್ಲಿ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗೆ ಆಯೋಜಿಸಿದ್ದ ಎರಡನೇ ಹಂತದ ಪೂರ್ವಭಾವಿ ಚುನಾವಣಾ ತರಬೇತಿಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್. ಮಾತನಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.