
ಬಸವಕಲ್ಯಾಣ: ನಗರದ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವ ಕಾರಣ ವರ್ತುಲ ರಸ್ತೆ ಮಂಜೂರು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಸೋಮವಾರ ಮನವಿಪತ್ರ ಸಲ್ಲಿಸಿದರು.
ರಾಷ್ಟ್ರೀಯ ಹೆದ್ದಾರಿಯಿಂದ ಕೋಟೆವರೆಗೆ 7 ಕಿ.ಮೀ ಉದ್ದದ ಒಂದೇ ಮುಖ್ಯ ರಸ್ತೆ ಇದೆ. ಅಲ್ಲದೆ ನಗರದಲ್ಲಿ ಲಾರಿ ಮತ್ತಿತರ ವಾಹನಗಳ ಸಂಖ್ಯೆಯೂ ಅಧಿಕವಾಗಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ದಟ್ಟಣೆ ಆಗುತ್ತಿದೆ. ಪಾದಚಾರಿಗಳಿಗೆ ಸಂಚಾರಕ್ಕೆ ಕಷ್ಟವಾಗುತ್ತಿದೆ. ಅಪಘಾತಗಳು ಸಹ ಸಂಭವಿಸುತ್ತಿವೆ. ಅನುಭವ ಮಂಟಪದ ಕಾಮಗಾರಿಯೂ ಪೂರ್ಣಗೊಳ್ಳುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಲಿದೆ. ಆದ್ದರಿಂದ ವರ್ತುಲ್ ರಸ್ತೆ ಅಗತ್ಯವಾಗಿದೆ ಎಂದಿದ್ದಾರೆ.
ನಗರದಲ್ಲಿ ಹಳೆಯ ಎಪಿಎಂಸಿ ಕಚೇರಿ ಮತ್ತು ಮಾರುಕಟ್ಟೆ ಇದೆ. ಹೊಸ ಹೈ ಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ಮಂಜೂರಾತಿ ನೀಡಬೇಕು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಯೋಜನೆ ಸಹ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.