ADVERTISEMENT

ಉಪ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿ ಪವನ ಗೆಲುವು

​ಪ್ರಜಾವಾಣಿ ವಾರ್ತೆ
Published 23 ಮೇ 2022, 4:29 IST
Last Updated 23 ಮೇ 2022, 4:29 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಬಸವಕಲ್ಯಾಣ: ನಗರಸಭೆಯ 25ನೇ ವಾರ್ಡ್‌ನ ಉಪ ಚುನಾವಣೆಯ ಮತ ಎಣಿಕೆ ಭಾನುವಾರ ನಡೆದಿದ್ದು ಕಾಂಗ್ರೆಸ್‌ ಅಭ್ಯರ್ಥಿ ಪವನ ಗಾಯಕವಾಡ ಜಯ ಗಳಿಸಿದ್ದಾರೆ.

ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಗೆದ್ದಿದ್ದ ಈ ಹಿಂದಿನ ಕಾಂಗ್ರೆಸ್‌ ಸದಸ್ಯ ರವೀಂದ್ರ ಗಾಯಕವಾಡ ಅವರು ವಿಧಾನಸಭೆಯ ಉಪ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆಗೊಂಡಿದ್ದರು. ಈ ಕಾರಣದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆಯ ಮತದಾನ ನಡೆದಿತ್ತು.

ಪವನ ಗಾಯಕವಾಡ ಅವರು 1075 ಮತ ಪಡೆದರೇ ಬಿಜೆಪಿ ಅಭ್ಯರ್ಥಿ ಮನೋಜ ದಾದೆಗೆ ಅವರು 232 ಮತ ಹಾಗೂ ಜೆಡಿಎಸ್ ಅಭ್ಯರ್ಥಿ ರಾಹುಲ್ ಶಿಂಧೆ ಅವರು 144 ಮತ ಪಡೆದರು. ಕಾಂಗ್ರೆಸ್ ಅಭ್ಯರ್ಥಿ 843 ಮತಗಳಿಂದ ವಿಜೇತರಾದರು.

ADVERTISEMENT

ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಶಾಸಕರು, ಹಿರಿಯ ಮುಖಂಡರು ಹಾಗೂ ಇತರೆ ಪದಾಧಿಕಾರಿಗಳು ಪ್ರಚಾರ ಕೈಗೊಂಡಿದ್ದರಿಂದ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿತ್ತು.
ಕಾಂಗ್ರೆಸ್ ಕೈಯಲ್ಲೇ ನಗರಸಭೆಯ ಆಡಳಿತದ ಚುಕ್ಕಾಣಿ ಇದೆ. ಈ ಸ್ಥಾನದಲ್ಲಿ ಇದೇ ಪಕ್ಷದ ಅಭ್ಯರ್ಥಿ ಗೆದ್ದಿದ್ದರಿಂದ ಮತ್ತಷ್ಟು ಬಲ ಬಂದಂತೆ
ಆಗಿದೆ.

ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾದ ನಂತರ ಮುಖ್ಯ ರಸ್ತೆಯಲ್ಲಿ ವಿಜೇತ ಅಭ್ಯರ್ಥಿ ಪವನ ಗಾಯಕವಾಡ ಅವರ ಮೆರವಣಿಗೆ ನಡೆಯಿತು. ಪಕ್ಷದ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.

ಬಿಜೆಪಿ ಅವನತಿ ಆರಂಭ; ಖಂಡ್ರೆ

ಭಾಲ್ಕಿ: ಬಸವಕಲ್ಯಾಣ ನಗರ ಸಭೆಯ 25ನೇವಾರ್ಡ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲವು ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ 232 ಮತ ಪಡೆದು ಸೋತು ಮುಖಭಂಗ ಅನುಭವಿಸಿದ್ದಾರೆ. ಬಸವಕಲ್ಯಾಣದಿಂದಲೇ ಬಿಜೆಪಿಯ ಅವನತಿ ಆರಂಭ ಗೊಂಡಿದೆ. ಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿಜೃಂಭಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.