
ಭಾಲ್ಕಿ: ಪ್ರತಿಯೊಬ್ಬರು ಸ್ವಧರ್ಮದಲ್ಲಿ ನಿಷ್ಠೆ ಇಟ್ಟುಕೊಂಡು ಸಮುದಾಯವನ್ನು ಸಂಘಟಿಸುವುದರ ಜತೆಗೆ ಪರಧರ್ಮಗಳ ಬಗ್ಗೆ ಗೌರವ ಬೆಳೆಸಿಕೊಂಡು ಸುಂದರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಚಿವ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನ ಮತ್ತು ಅಭಿನಂದನಾ ಸಮಿತಿ ವತಿಯಿಂದ ಸೋಮವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ವೀರಶೈವ ಲಿಂಗಾಯತ ಬಹುದೊಡ್ಡ ಸಮುದಾಯವಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಒಳ ಪಂಗಡಗಳನ್ನು ಒಗ್ಗೂಡಿಸಿ ಈ ಸಮಾಜವನ್ನು ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. 122 ವರ್ಷಗಳ ಇತಿಹಾಸ ಹೊಂದಿರುವ ವೀರಶೈವ ಲಿಂಗಾಯತ ಮಹಾಸಭೆಗೆ 24ನೇ ಅಧ್ಯಕ್ಷರನ್ನಾಗಿ ವಿಶ್ವಾಸವಿಟ್ಟು ನನಗೆ ಜವಾಬ್ದಾರಿ ವಹಿಸಲಾಗಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ವಸತಿ ನಿಲಯ ಕಟ್ಟಡಗಳನ್ನು ನಿರ್ಮಿಸಿ ಸಮಾಜದ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ಈಶ್ವರ ಖಂಡ್ರೆ ಅವರು ರಾಜಕೀಯ ಸೇವೆ ಜತೆಗೆ ಧರ್ಮದ ಕಾರ್ಯಗಳಲ್ಲಿಯು ತೊಡಗಿಸಿಕೊಂಡಿದ್ದಾರೆ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ, ಅನುಭವ ಮಂಟಪ ಕಟ್ಟಡ ನಿರ್ಮಾಣಕ್ಕೆ ನೀಲನಕಾಶೆ, ಅನುದಾನ ಬಿಡುಗಡೆ, ಬಸವಣ್ಣನವರ ಹೆಸರಿನಲ್ಲಿ ಉದ್ಯಾನವನ ನಿರ್ಮಾಣ ಸೇರಿ ಇಂತಹ ಅನೇಕ ವಿಧಾಯಕ ಕಾರ್ಯಗಳು ಈಶ್ವರ ಖಂಡ್ರೆ ಅವರು ಮಾಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿ ಮಾತನಾಡಿದರು. ಅಭಿನಂದನಾ ಸಮಿತಿ ಅಧ್ಯಕ್ಷ ಹಿರಿಯ ನ್ಯಾಯವಾದಿ ರಾಜಶೇಖರ ಅಷ್ಟೂರೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಡಾ.ಗೀತಾ ಈಶ್ವರ ಖಂಡ್ರೆ ಇದ್ದರು.
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು. ಸಂತೋಷ ಬಿಜಿ ಪಾಟೀಲ ವಂದಿಸಿದರು.
ಖಂಡ್ರೆ ಸಿಎಂ ಆಗಲಿ: ಪಟ್ಟದ್ದೇವರು
ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು ಸಚಿವರು ಆಗಿರುವ ಈಶ್ವರ ಖಂಡ್ರೆ ಅವರು ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿ ರಾಜ್ಯವನ್ನು ಪ್ರತಿನಿಧಿಸಲಿ ಎಂದು ಬಸವಲಿಂಗ ಪಟ್ಟದ್ದೇವರು ಹೇಳಿದರು. ರಾಜ್ಯದಲ್ಲಿ ಸಚಿವರಾಗಿ ಖಂಡ್ರೆ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಸಿಎಂ ಆಗುವ ಎಲ್ಲ ಅರ್ಹತೆ ಅವರಲ್ಲಿದೆ. ಹಾಗಾಗಿ ಈಶ್ವರ ಖಂಡ್ರೆ ಅವರನ್ನು ಸಿಎಂ ಆಗಿ ನೋಡುವ ಈ ಭಾಗದ ಜನರ ಕನಸು ಆದಷ್ಟು ಬೇಗ ಈಡೇರಲಿ ಎಂದು ಆಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.