ಭಾಲ್ಕಿ: ತಾಲ್ಲೂಕಿನ ಹಾಲಹಳ್ಳಿ (ಕೆ) ಗ್ರಾಮದ ಬೀದರ್ ವಿಶ್ವವಿದ್ಯಾಲಯದ ಜ್ಞಾನ ಕಾರಂಜಿಯಲ್ಲಿ ಬೀದರ್ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಗುರುವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ಆಧುನಿಕ ದುಬಾರಿ ದಿನಗಳಲ್ಲಿ ಕಡಿಮೆ ಸಂಬಳದಲ್ಲಿ ಜೀವನ ಸಾಗಿಸುವುದು ದುಸ್ತರವಾಗಿದೆ. ವರ್ಷದಲ್ಲಿ ಕೇವಲ 8 ತಿಂಗಳ ಮಾತ್ರ ವೇತನ ದೊರೆಯುತ್ತಿದೆ. ಉಳಿದ ದಿನಗಳನ್ನು ಸಾಗಿಸುವುದು ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಶ್ವವಿದ್ಯಾಲಯ ನಿಮಯದಂತೆ ಪ್ರತಿ ತಿಂಗಳು ₹50 ಸಾವಿರದಂತೆ ವರ್ಷದಲ್ಲಿ 11 ತಿಂಗಳಾದರೂ ವೇತನ ನೀಡಬೇಕು. ಈ ಮೂಲಕ ಆತಂಕದಲ್ಲಿರುವ ಅತಿಥಿ ಉಪನ್ಯಾಸಕರ ಜೀವನೋಪಾಯಕ್ಕೆ ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.
ಮುಂದಿನ ಶೈಕ್ಷಣಿಕ ಅವಧಿಗೆ ಅಥಿತಿ ಉಪನ್ಯಾಸಕರ ನೇಮಕದ ಸಂದರ್ಭದಲ್ಲಿ ಸಂದರ್ಶನ ನಡೆಸದೆ ಸದ್ಯ ಇರುವ ಉಪನ್ಯಾಸಕರನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು. ಸಂಘದ ಅಧ್ಯಕ್ಷ ಶಾಂತಕುಮಾರ ಎಸ್. ಚಿದ್ರಿ, ಪ್ರಮುಖರಾದ ಅಂಬರೀಶ, ತುಕಾರಾಮ ಆರ್. ಮೇತ್ರೆ, ಅರುಣಕುಮಾರ ಕೆ. ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.