ಭಾಲ್ಕಿ (ಬೀದರ್ ಜಿಲ್ಲೆ): ಶುಕ್ರವಾರ ರಾತ್ರಿ ನಿಧನರಾದ ಮಾಜಿಸಚಿವ ಭೀಮಣ್ಣ ಖಂಡ್ರೆಯವರ ಅವರ ಅಂತಿಮ ದರ್ಶನಕ್ಕೆ ಇಲ್ಲಿನ ಖಂಡ್ರೆ ಗಲ್ಲಿಯಲ್ಲಿನ ಅವರ ನಿವಾಸದತ್ತ ಜನ ಆಗಮಿಸುತ್ತಿದ್ದಾರೆ.
ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ಧಾರ್ಮಿಕ ವಿಧಿ ವಿಧಾನಗಳನ್ಮು ನೆರವೇರಿಸುತ್ತಿದ್ದಾರೆ. ಇದಾದ ನಂತರ ಮನೆಯ ಪಕ್ಕದಲ್ಲಿ ಹಾಕಿರುವ ಶಾಮಿಯಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರ ಇಡಲಾಗುತ್ತದೆ. ಮಧ್ಯಾಹ್ನದ ನಂತರ ಮೆರವಣಿಗೆಯಲ್ಲಿ ಭಾಲ್ಕಿ ಹೊರವಲಯದ ಚಿಕ್ಕಲಚಂದಾ ಸಮೀಪದ ಶಾಂತಿಧಾಮಕ್ಕೆ ಕರೆದೊಯ್ಯಲಾಗುತ್ತದೆ. ಎಲ್ಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಭೀಮಣ್ಣ ಖಂಡ್ರೆಯವರ ಮೊಮ್ಮಗ, ಸಂಸದ ಸಾಗರ ಖಂಡ್ರೆ ಪ್ರಜಾವಾಣಿಗೆ ತಿಳಿಸಿದ್ದಾರೆ.
ಮನೆಯ ಸುತ್ತಮುತ್ತಲಿನ ಮಾರ್ಗಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ವಾಹನಗಳ ಸಂಚಾರ ನಿರ್ಬಂಧಿಸಲಾಗಿದ್ದು, ಜನ ಮಹಾತ್ಮ ಗಾಂಧಿ ವೃತ್ತದ ಸುತ್ತ ವಾಹನಗಳಲ್ಲಿ ಬಂದು ಕಾಲ್ನಡಿಗೆಯ ಲ್ಲಿ ಅವರ ಮನೆಗೆ ಭೇಟಿ ಕೊಡುತ್ತಿದ್ದಾರೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಲ್ಕಿಗೆ ಆಗಮಿಸುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರಕುಮಾರ್ ಖಂಡ್ರೆ ಸೇರಿದಂತೆ ಅವರ ಕುಟುಂಬ ವರ್ಗದವರು, ಬಂಧುಗಳು ಸ್ಥಳದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.