ಬೀದರ್: ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಉಪ ವಿಭಾಗಾಧಿಕಾರಿ, ತಹಶೀಲ್ದಾರರು ಹಾಗೂ ತಾಲ್ಲೂಕು ಪಂಚಾಯಿತಿ ಇಒಗಳ ಸಭೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಸಭಾಂಗಣದಲ್ಲಿ ನಡೆದ ವಿಡಿಯೊ ಸಂವಾದದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ‘ಯಾವುದೇ ದೂರುಗಳು ಬಾರದ ಹಾಗೆ ಚುನಾವಣೆಯನ್ನು ನಡೆಸಬೇಕು. ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಕಾರ್ಯವು ತುರ್ತಾಗಿ ನಡೆಯಬೇಕು. ಕೋವಿಡ್-19 ಕಾರಣ ಸಾಕಷ್ಟು ಮುಂಜಾಗ್ರತೆ ವಹಿಸಿ ಚುನಾವಣೆ ನಡೆಸಬೇಕಿದೆ’ ಎಂದು ಹೇಳಿದರು.
‘ವಿವಿಧ ಸಮಿತಿಗಳ ರಚನೆ ಮತ್ತು ನೋಡಲ್ ಅಧಿಕಾರಿಗಳ ನೇಮಕ ಕಾರ್ಯವು ತುರ್ತಾಗಿ ನಡೆಯಬೇಕು. ಚುನಾವಣೆ ಸಂಪೂರ್ಣ ಮೇಲುಸ್ತುವಾರಿಯನ್ನು ಸಮರ್ಪಕವಾಗಿ ನೋಡಿಕೊಳ್ಳುವುದು ಮತ್ತು ಇದಕ್ಕೆ ಸಕಾಲಕ್ಕೆ ಸಹಕರಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿಸಬೇಕು’ ಎಂದು ತಿಳಿಸಿದರು.
ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ಡಿಸೆಂಬರ್ 4ರಂದು ತರಬೇತಿಗೆ ಮತ್ತು ಮತಗಟ್ಟೆ ಅಧಿಕಾರಿಗಳಿಗೆ ಮಾಸ್ಟರ್ ಟ್ರೇನರ್ ತರಬೇತಿಯನ್ನು ನೀಡಲು ಕೂಡಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಮಾತನಾಡಿ, ‘ಚುನಾವಣೆಯ ಪ್ರಚಾರ ಹಾಗೂ ಚುನಾವಣೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಅನುಮತಿ ಪಡೆಯದೆ ನಡೆಸಬಾರದು. ಇದಕ್ಕೆ ಸಂಬಧಿಸಿದಂತೆ ಪತ್ರಿಕಾ ಪ್ರಕಟಣೆ ಹೊರಡಿಸಿ ವಿವರವಾಗಿ ತಿಳಿಸಲಾಗುವುದು’ ಎಂದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್ ಮಾತನಾಡಿ, ‘ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಭದ್ರತಾ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಲು ಎಲ್ಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕರಿಸಬೇಕು’ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರೀಮಾ ಪನ್ವಾರ, ಬಸವಕಲ್ಯಾಣ್ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ಬೀದರ್ ತಹಶೀಲ್ದಾರ್ ಗಂಗಾದೇವಿ ಸಿ.ಎಚ್., ಪೌರಾಯುಕ್ತ ರವೀಂದ್ರನಾಥ ಅಂಗಡಿ, ಬೀದರ್, ಭಾಲ್ಕಿ ಹಾಗೂ ಹುಮನಾಬಾದ್ ಡಿವೈಎಸ್ಪಿ, ಚುನಾವಣಾ ಮಾಸ್ಟರ್ ಟ್ರೇನರ್ ಗೌತಮ ಅರಳಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.