ಬೀದರ್: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದ ಸಿದ್ಧತೆಯನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಪರಿಶೀಲಿಸಿದರು.
ನಗರದ ನೆಹರೂ ಕ್ರೀಡಾಂಗಣಕ್ಕೆ ಭೇಟಿ ಕೊಟ್ಟು, ಮಹಾನಗರ ಪಾಲಿಕೆ ಪೌರಾಯುಕ್ತ ಶಿವರಾಜ ರಾಠೋಡ್ ಸೇರಿದಂತೆ ಇತರೆ ಅಧಿಕಾರಿಗಳಿಂದ ಸಿದ್ಧತೆಯ ಕುರಿತು ಮಾಹಿತಿ ಪಡೆದರು.
ಆನಂತರ ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೊರ ರೋಗಿಗಳ ಹೆರಿಗೆ ಕೋಣೆ, ಔಷಧಾಲಯ ವೀಕ್ಷಿಸಿದರು.‘ನಾಯಿ ಕಡಿತ ಹಾಗೂ ಹಾವು ಕಡಿತದ ಇಂಜೆಕ್ಷ ಕಡ್ಡಾಯವಾಗಿ ಲಭ್ಯವಿರುವಂತೆ ನೋಡಿಕೊಳ್ಳಬೇಕು’ ಎಂದು ಅಲ್ಲಿನ ವೈದ್ಯರಿಗೆ ಸೂಚಿಸಿದರು. ಡಾ.ಜೋಹಾ ಫಾತಿಮಾ ಇದ್ದರು.
ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದ ಪ್ರಾಥಮಿಕ ಶಾಲೆ ಹಾಗೂ ಮೌಲಾನಾ ಆಜಾದ್ ಪ್ರೌಢ ಶಾಲೆಗೆ ಭೇಟಿ ನೀಡಿ ಶಿಥಿಲಗೊಂಡ ಕಟ್ಟಡಗಳ ಪರಿಶೀಲನೆ ನಡೆಸಿದರು. ಕಟ್ಟಡ ಬಿದ್ದು ಗಾಯಗೊಂಡ ವಿದ್ಯಾರ್ಥಿಯ ಬಗ್ಗೆ ಮಾಹಿತಿ ಪಡೆದರು. ನಲಿ ಕಲಿ ಕೇಂದ್ರದಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ವೀಕ್ಷಿಸಿದರು. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಗಣಿತ ಪಾಠ ಮಾಡಿ, ಮಕ್ಕಳ ಶೈಕ್ಷಣಿಕ ಗುಣಪಟ್ಟ ಪರಿಶೀಲಿಸಿದರು. ಓಂಕಾರ ರುಗನ್, ಬಿಇಒ ಮದರ್ ಖಾನ್ ಇದ್ದರು.
ನಂತರ ಅವರು ಸಿಕಿಂದ್ರಾಪುರ ಹಾಲು ಉತ್ಪಾದಕರ ಸಂಘಕ್ಕೆ ಭೇಟಿ ನೀಡಿ ಮಹಿಳಾ ಸದಸ್ಯರೊಂದಿಗೆ ಹಾಲು ಶೇಖರಣೆ ಬಗ್ಗೆ ಮಾಹಿತಿ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.