ಬೀದರ್: ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಅವರನ್ನು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ರಾಷ್ಟ್ರೀಯ ಆರೋಗ್ಯ ಮಿಷನ್ ಹಾಗೂ ಆರೋಗ್ಯ ನಿರ್ದೇಶನಾಲಯದ ನಿರ್ದೇಶಕ 2012ರ ಐಎಎಸ್ ತಂಡದ ಅಧಿಕಾರಿ ರಾಮಚಂದ್ರನ್ ಆರ್. ಬೀದರ್ ನೂತನ ಜಿಲ್ಲಾಧಿಕಾರಿಯಾಗಿ ಬರಲಿದ್ದಾರೆ.
ಆರ್.ರಾಮಚಂದ್ರನ್ ಅವರು 2019ರಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ, ಅದಕ್ಕೂ ಮೊದಲು ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
ಜಿಲ್ಲೆಯಲ್ಲಿ ಎರಡು ವರ್ಷ ಕಾರ್ಯ ನಿರ್ವಹಿಸಿದ ಎಚ್.ಆರ್.ಮಹಾದೇವ ಹಾಗೂ ಜಿಲ್ಲೆಯ ಕೆಲ ಶಾಸಕರ ನಡುವಿನ ಸಂಬಂಧ ಹಳಸಿ ಹೋಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಹಾಗೂ ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ ಅವರು ಜಿಲ್ಲಾಧಿಕಾರಿ ವರ್ಗಾವಣೆಗೆ ಮುಖ್ಯಮಂತ್ರಿಯ ಮೇಲೆ ಒತ್ತಡ ಹಾಕಿದ್ದರು.
ಭಾಲ್ಕಿ ತಾಲ್ಲೂಕಿನಲ್ಲಿ ವಸತಿ ಯೋಜನೆಯ ಮನೆಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದ ವಿವಾದ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ. ಎಚ್.ಆರ್.ಮಹಾದೇವ ಅವರು ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ನೀಡಿರುವ ವರದಿ ಹಾಗೂ ಭಾಲ್ಕಿಯ ಬಿಜೆಪಿ ಮುಖಂಡ ಡಿ.ಕೆ.ಸಿದ್ರಾಮ ಮಾಡಿರುವ ಆರೋಪವನ್ನು ಉಲ್ಲೇಖಿಸಿ ನೋಟಿಸ್ ಜಾರಿ ಮಾಡಿದ್ದರಿಂದ ಈಶ್ವರ ಖಂಡ್ರೆ ಅವರ ಕ್ರೋಧಕ್ಕೆ ಗುರಿಯಾಗಿದ್ದರು. ಮುಖ್ಯಮಂತ್ರಿ, ವಿಧಾನಸಭಾಧ್ಯಕ್ಷ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ಲಿಖಿತ ದೂರು ನೀಡಿದ್ದರು.
ಸಚಿವ ಪ್ರಭು ಚವಾಣ್ ಅವರು ಪಡೆದ ಜಾತಿ ಪ್ರಮಾಣ ಪತ್ರ ನಕಲಿಯಾಗಿದೆ. ಅವರ ಆಯ್ಕೆಯನ್ನು ರದ್ದುಪಡಿಸಬೇಕು ಎಂದು ಔರಾದ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಜಿಲ್ಲಾಧಿಕಾರಿಯಿಂದ ವರದಿ ಕೇಳಿದ್ದರಿಂದ ಮಂಗಳವಾರ ಎಚ್.ಆರ್.ಮಹಾದೇವ ಅವರು ಸಚಿವ ಚವಾಣ್ ಅವರಿಗೂ ನೋಟಿಸ್ ಜಾರಿ ಮಾಡಿದ ಮಾಹಿತಿ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.