ಬೀದರ್: ವಿಧಾನ ಪರಿಷತ್ತಿನ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಭೀಮರಾವ್ ಬಸವರಾಜ ಪಾಟೀಲ ಹುಮನಾಬಾದ್ ಅವರು 227 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಭೀಮರಾವ್ ಪಾಟೀಲ 1,789 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ 1,562 ಮತಗಳನ್ನು ಪಡೆದರು. ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ ಗೋವಿಂದರಾವ್ ಸೋಮವಂಶಿ ಅವರಿಗೆ 15 ಮತಗಳು ಬಂದವು.
ಒಟ್ಟು 3,456 ಮತದಾರರ ಪೈಕಿ 3,366 ಸದಸ್ಯರು ತಮ್ಮ ಹಕ್ಕು ಚಲಾಯಿಸಿದ್ದರು. 84 ಮತಗಳು ತಿರಸ್ಕೃತಗೊಂಡವು. ಇಲ್ಲಿಯ ಬಿವಿಬಿ ಕಾಲೇಜಿನಲ್ಲಿ ಒಟ್ಟು 12 ಟೇಬಲ್ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಕಡಿಮೆ ಮತಗಳು ಬಂದಿರುವುದು ಮನವರಿಕೆಯಾಗುತ್ತಿದ್ದಂತೆಯೇ ಪ್ರಕಾಶ ಖಂಡ್ರೆ ಮತ ಎಣಿಕೆ ಕೇಂದ್ರದಿಂದ ನಿರ್ಗಮಿಸಿದರು. ‘ಮತದಾರರ ತೀರ್ಪಿಗೆ ತಲೆಬಾಗುತ್ತೇನೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.
‘ಬಿಜೆಪಿಯ ದುರವರ್ತನೆ, ದುರಾಡಳಿತ ಹಾಗೂ ದಬ್ಬಾಳಿಕೆಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಇದು ಮುಂಬರುವ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಗೆಲುವಿನ ಸಂಕೇತವಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.