ಬೀದರ್: ‘ನಗರದ ಭಾರತೀಯ ಸ್ಟೇಟ್ ಬ್ಯಾಂಕ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಸಿಬ್ಬಂದಿಯನ್ನು ಕೊಂದು ಹಣ ದರೋಡೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಸಿಬ್ಬಂದಿ ಮೃತಪಟ್ಟಿರುವುದು ತೀವ್ರ ನೋವಿನ ಸಂಗತಿ. ಮೃತರ ಕುಟುಂಬದವರಿಗೆ ಈ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲೆಂದು ಪ್ರಾರ್ಥಿಸುತ್ತೇನೆ. ಈ ನೋವಿನ ಸಂದರ್ಭದಲ್ಲಿ ಸರ್ಕಾರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.
ವಿಷಯ ತಿಳಿದ ಕೂಡಲೇ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಹಾಗೂ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ದುಷ್ಕರ್ಮಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಿ, ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ ಕ್ರಮ ವಹಿಸಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಎ.ಟಿ.ಎಂ.ಗೆ ಹಣ ಸಾಗಿಸುವಾಗ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕಿತ್ತು, ಏನು ಲೋಪ ಆಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಗುರುವಾರ (ಜ.17) ಬೀದರ್ ಗೆ ಬಂದು, ಮೃತರ ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.