
ಬೀದರ್: ಶೇಕಡಾ 6:6:5ರ ಅನುಪಾತದಂತೆ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಹಾಗೂ ಮಾದಿಗ ಸಂಘಟನೆಗಳ ಒಕ್ಕೂಟದ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಳಿಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಸಲ್ಲಿಸಿದರು.
ಸುಪ್ರೀಂಕೋರ್ಟ್ ಆದೇಶದಂತೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಹಿಂದುಳಿದಿರುವಿಕೆ ಆಧಾರದ ಮೇಲೆ ಒಳ ಮೀಸಲಾತಿ ಜಾರಿಯಾಗಬೇಕು. ರಾಜ್ಯ ಸರ್ಕಾರ ಸ್ಪಷ್ಟ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅವಕಾಶ ವಂಚಿತ ಸಮುದಾಯಗಳು ಮತ್ತೊಂದು ಹಂತದ ಹೋರಾಟಕ್ಕೆ ಮುಂದಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಸಮಿತಿ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಕೆ.ಜಿ.ಯಿಂದ ಪಿಎಚ್.ಡಿ ವರೆಗೆ ಶಿಕ್ಷಣದಲ್ಲಿ 6:6:5ರ ಅನುಪಾತದಲ್ಲಿ ಮೀಸಲಾತಿ, ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿಯಲ್ಲಿ ಒಳ ಮೀಸಲಾತಿ, ಸ್ಥಳೀಯ ಸಂಸ್ಥೆಗಳಲ್ಲಿ ಪ್ರಾತಿನಿಧ್ಯ, ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಗಳ ಹಂಚಿಕೆ ಸೇರಿದಂತೆ ಶಾಶ್ವತ ಆಯೋಗ ರಚಿಸಬೇಕೆಂದು ಆಗ್ರಹಿಸಿದರು.
ಒಳ ಮೀಸಲಾತಿ ಪ್ರಯೋಜನ ಪಡೆಯುವಾಗ ನಡೆಯುವ ಮೋಸ ತಡೆಗೆ ಜಾತಿ ಪ್ರಮಾಣ ಪತ್ರಗಳನ್ನು ಸರಿಯಾದ ಉಪಜಾತಿ ವಿವರಗಳೊಂದಿಗೆ ನೀಡಬೇಕು. ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಆದಿ ಜಾಂಬವ ಸಂಘದ ರಾಜ್ಯ ಉಪಾಧ್ಯಕ್ಷ ರಾಜು ಕಡ್ಯಾಳ, ಮಾದಿಗ ದಂಡೋರ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್, ಸಂಜೀವ್ ಬೇಂದ್ರೆ, ಸ್ವಾಮಿದಾಸ್ ಕೆಂಪೆನೋರ್, ಕಮಲಾಕರ ಹೆಗಡೆ, ಜಾಫೆಟ್ ಕಡ್ಯಾಳ, ರಾಜ್ಯಾಧ್ಯಕ್ಷ ರಮೇಶ್ ಕಟ್ಟಿತೂಗಾಂವ್ ವಿಜಯಕುಮಾರ್ ಹಿಪ್ಪಳಗಾಂವ್, ವಿಜಯಕುಮಾರ್ ನಾತೆ, ಹಣಮಂತ ಸೂರ್ಯವಂಶಿ, ಸೂರ್ಯಕಾಂತ್ ದಂಡಿನ್, ದೇವಿದಾಸ್ ತುಮಕುಂಟೆ, ಜೀವನ ರಿಕ್ಕೆ, ವಿಲ್ಸನ್ ಚಿದ್ರಿ, ಪೀಟರ್ ಶ್ರೀಮಂಡಲ, ದತ್ತು ಭೇಂಡೆ, ತುಳಸಿರಾಮ್ ಜಾಕತೆ, ಸುಂದರರಾಜ ಮುದಾಳೆ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.