ಬೀದರ್: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಕೋವಿಡ್ 19 ಸೋಂಕಿನ ಕಾರಣ ಸ್ನಾತಕೋತ್ತರ ಪರೀಕ್ಷೆಗಳನ್ನು ರದ್ದು ಪಡಿಸಿ ಮಾರ್ಚ್ 28ರ ವರೆಗೆ ರಜೆ ಘೋಷಿಸಿದೆ.
ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ವಿಶ್ವವಿದ್ಯಾಲಯದ ವಸತಿ ನಿಲಯಗಳಲ್ಲಿರುವ 400 ವಿದ್ಯಾರ್ಥಿಗಳಿಗೆ ರಜೆ ಮೇಲೆ ತೆರಳುವಂತೆ ಸೂಚನೆ ನೀಡಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ನಾರಾಯಣ ಸ್ವಾಮಿ ತಿಳಿಸಿದ್ದಾರೆ.
ಪದವಿ ತರಗತಿಗಳು ಸಾಮಾನ್ಯವಾಗಿ ಜುಲೈ ಹಾಗೂ ಆಗಸ್ಟ್ನಲ್ಲಿ ನಡೆಯುತ್ತವೆ. ಸ್ನಾತಕೋತ್ತರ ವಿಭಾಗದ ಪರೀಕ್ಷೆಗಳು ಮಾತ್ರ ಆರಂಭವಾಗಬೇಕಿತ್ತು. ಸರ್ಕಾರ ನಿರ್ದೇಶನ ನೀಡಿರುವುದರಿಂದ ಎಲ್ಲ ಪರೀಕ್ಷೆಗಳನ್ನೂ ಮುಂದೂಡಲಾಗಿದೆ ಎಂದು ಹೇಳಿದ್ದಾರೆ.
‘ಕೋಳಿ ಹಾಗೂ ಮೊಟ್ಟೆಗಳಿಂದ ಕೋವಿಡ್–19 ಸೋಂಕು ಹರಡುತ್ತಿಲ್ಲ. ಸೋಂಕಿನ ಭಯದಿಂದ ಕೋಳಿ ಮಾಂಸ ಸೇವಿಸುವವರ ಸಂಖ್ಯೆ ಕಡಿಮೆಯಾಗಿದೆ. ಕೋಳಿಗಳ ಬೆಲೆ ಕುಸಿದು ಅವುಗಳ ನಿರ್ವಹಣಾ ವೆಚ್ಚವೇ ಅಧಿಕವಾಗುತ್ತಿದೆ. ಇದೇ ಕಾರಣಕ್ಕೆ ಹೆಚ್ಚಿನ ಆರ್ಥಿಕ ನಷ್ಟ ಭರಿಸಲಾಗದೆ ಕೆಲವರು ಕೋಳಿಗಳ ಸಾಮೂಹಿಕ ಸಂಹಾರ ಮಾಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.
‘ಕೋಳಿ ಮಾಂಸ ಹಾಗೂ ಮೊಟ್ಟೆಯನ್ನು ಚೆನ್ನಾಗಿ ಕುದಿಸಿ ತಿನ್ನುವುದರಿಂದ ವ್ಯಕ್ತಿಯ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.