ADVERTISEMENT

ಬೀದರ್‌ | ವಿಶೇಷ ಕೈಗಾರಿಕಾ ನೀತಿ ರೂಪಿಸಲು ಆಗ್ರಹ: ಜನಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 5:12 IST
Last Updated 12 ಅಕ್ಟೋಬರ್ 2025, 5:12 IST
ವೆಲ್‌ಫೇರ್‌ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಬೀದರ್‌ನಲ್ಲಿ ಶನಿವಾರ ಜನಜಾಗೃತಿ ಜಾಥಾ ನಡೆಸಿದರು
ವೆಲ್‌ಫೇರ್‌ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಬೀದರ್‌ನಲ್ಲಿ ಶನಿವಾರ ಜನಜಾಗೃತಿ ಜಾಥಾ ನಡೆಸಿದರು   

ಬೀದರ್‌: ರಾಜ್ಯ ಸರ್ಕಾರ ವಿಶೇಷ ಕೈಗಾರಿಕಾ ನೀತಿ ರೂಪಿಸಬೇಕೆಂದು ಆಗ್ರಹಿಸಿ ವೆಲ್‌ಫೇರ್‌ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ನಗರದಲ್ಲಿ ಶನಿವಾರ ಜನಜಾಗೃತಿ ಜಾಥಾ ನಡೆಸಿದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ತಾಹೀರ್ ಹುಸೇನ್ ಮಾತನಾಡಿ, ಕಲ್ಯಾಣ ಕರ್ನಾಟಕಕ್ಕೆ ಭರಪೂರ ಅನುದಾನ ಹರಿದು ಬಂದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಹೊಂದುತ್ತಿಲ್ಲ. ಕಲ್ಯಾಣ ಕರ್ನಾಟಕಕ್ಕೆ 10 ವರ್ಷದಲ್ಲಿ ₹25 ಸಾವಿರ ಕೋಟಿ ಅನುದಾನ ನೀಡಲಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371 (ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ಸೌಲಭ್ಯ ಕಲ್ಪಿಸಿದ್ದರೂ ಸಹ 50 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. 2 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ. ಯುವಕರಿಗೆ ಅರ್ಹತೆಗೆ ತಕ್ಕಂತೆ ಉದ್ಯೋಗ ಸಿಗುತ್ತಿಲ್ಲ.ಕಾರ್ಮಿಕರು ಕೆಲಸ ಹುಡುಕಿಕೊಂಡು ಗುಳೇ ಹೋಗುವುದು ತಪ್ಪಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಿಲ್ಲ. ಅಪೌಷ್ಟಿಕತೆ ಸಮಸ್ಯೆ ತೀವ್ರವಾಗಿದೆ. ಶೈಕ್ಷಣಿಕ ಗುಣಮಟ್ಟ ಸುಧಾರಣೆ ಕಂಡಿಲ್ಲ ಎಂದು ಹೇಳಿದರು.

ADVERTISEMENT

ಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ದಿಗಾಗಿ ಅ. 6ರಿಂದ ಈ ಜಾಥಾ ಬಳ್ಳಾರಿಯಿಂದ ಆರಂಭವಾಗಿದ್ದು, ಅ.12ರಂದು ಕಲಬುರಗಿಯಲ್ಲಿ ಕೊನೆಗೊಳ್ಳಲಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷಗಳಾದರೂ ಕಲ್ಯಾಣ ಕರ್ನಾ ಟಕ ಭಾಗ ರಾಜ್ಯದ ಅತ್ಯಂತ ಹಿಂದುಳಿದ ಪ್ರದೇಶವಾಗಿಯೇ ಉಳಿದಿದೆ. ಇದರ ಸಮಗ್ರ ಅಭಿವೃದ್ಧಿಗೆ ವಿಶೇಷ ಕೈಗಾರಿಕಾ ನೀತಿ ರೂಪಿಸಬೇಕು. ಬಂಡವಾಳ ಹೂಡಿಕೆಯ ಪ್ರಮಾಣ ಹೆಚ್ಚಿಸಬೇಕು. ಈ ಭಾಗದ ಎಲ್ಲಾ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಪಕ್ಷದ ರಾಜ್ಯ ಉಪಾಧ್ಯಕ್ಷ ಶ್ರೀಕಾಂತ್ ಸಾಲಿಯಾನ್, ಸಿಪಿಐ ಮುಖಂಡ ಬಾಬುರಾವ್ ಹೊನ್ನಾ,  ‍ಪಕ್ಷದ ಜಿಲ್ಲಾಧ್ಯಕ್ಷ ಮುಬಶೀರ್ ಶಿಂಧೆ, ಮುಜಾಹಿದ್ ಪಾಷಾ ಖುರೇಶಿ, ಶರಣಪ್ಪ, ಸೈಯದ್ ಇಬ್ರಾಹಿಂ, ಸಿ.ಎಚ್. ಸಲಾಂ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.