ಬೀದರ್: ವಿಧಾನಸಭೆ ಉಪ ಚುನಾವಣೆಯಲ್ಲಿ 15 ಸ್ಥಾನಗಳ ಪೈಕಿ ಬಿಜೆಪಿ 12 ಸ್ಥಾನಗಳಲ್ಲಿ ಜಯ ಗಳಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಸೋಮವಾರ ವಿಜಯೋತ್ಸವ ಆಚರಿಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಸೇರಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡರು. ಪಕ್ಷದ ಪರ ಘೋಷಣೆಗಳನ್ನು ಕೂಗಿದರು.
ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪೂರೆ, ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ, ಪ್ರಧಾನ ಕಾರ್ಯದರ್ಶಿ ಈಶ್ವರಸಿಂಗ್ ಠಾಕೂರ್, ಸ್ಲಂ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಬಾಬುವಾಲಿ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಕುಮಾರ ಎಸ್. ಪಾಟೀಲ ಗಾದಗಿ, ಬಿಡಿಎ ಮಾಜಿ ಅಧ್ಯಕ್ಷ ಬಾಬುರಾವ್ ಮದಕಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಮುಖಂಡರಾದ ಸಂಗಮೇಶ ನಾಸಿಗಾರ, ಮಹೇಶ್ವರ ಸ್ವಾಮಿ, ಹಣಮಂತ ಬುಳ್ಳಾ ಹಾಗೂ ಬಸವರಾಜ ಪವಾರ್ ಮೊದಲಾದವರು ಪಾಲ್ಗೊಂಡಿದ್ದರು.
ಜನಪರ ಆಡಳಿತಕ್ಕೆ ಬೆಂಬಲ: ವಿಧಾನಸಭೆ ಉಪ ಚುನಾವಣೆಯಲ್ಲಿ ಮತದಾರರು 15 ಸ್ಥಾನಗಳ ಪೈಕಿ 12 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಜನಪರ, ಅಭಿವೃದ್ಧಿ ಪರ ಆಡಳಿತವನ್ನು ಬೆಂಬಲಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಪ್ರತಿಕ್ರಿಯಿಸಿದ್ದಾರೆ.
ಮತದಾರರ ತೀರ್ಪಿನಿಂದ ಬಿಜೆಪಿ ಸರ್ಕಾರಕ್ಕೆ ಬಡವರು, ದೀನ ದಲಿತರು, ಜನಸಾಮಾನ್ಯರ ಆಶಯಕ್ಕೆ ಅನುಗುಣವಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಶಕ್ತಿ ಬಂದಿದೆ. ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಹಾಗೂ ಇತರ ಪಕ್ಷಗಳನ್ನು ತಿರಸ್ಕರಿಸಿ ಛೀಮಾರಿ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.
ಮತದಾರರ ನಿರ್ಣಯದಿಂದ ಸರ್ಕಾರ ಸುಭದ್ರವಾಗಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಆಗಲಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.