ಬೀದರ್: ಕೋವೀಡ್-19 ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀಳಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮೂರನೇ ಅಲೆಯ ತಡೆಗೆ ಮುಂಚಿತವಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ತಿಳಿಸಿದರು.
.
ಮಕ್ಕಳಿಗೆ ಸೋಂಕು ಬಾರದಂತೆ ಹೆಚ್ಚಿನ ಗಮನ ಹರಿಸಬೇಕು. ಮುಂಜಾಗೃತಾ ಕ್ರಮವಾಗಿ ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಮಕ್ಕಳ ಆರೈಕೆ ಕೇಂದ್ರಗಳನ್ನು ತೆರೆಯಬೇಕು. ಪ್ರತಿಯೊಂದು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಮಕ್ಕಳ ಬೆಡ್ಗಳ ಸಂಖ್ಯೆ 80ಕ್ಕೆ ಏರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ನಗರದಲ್ಲಿ ಬುಧವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.
ತಾಲ್ಲೂಕು ಕೇಂದ್ರಗಳಲ್ಲಿ ತಜ್ಞ ವೈದ್ಯರ ತಂಡಗಳನ್ನು ರಚಿಸಬೇಕು. ಅವರಿಗೆ ಸೂಕ್ತ ತರಬೇತಿ ನೀಡುವಂತೆ ಸೂಚನೆ ನೀಡಲಾಗಿದೆ. ಮಕ್ಕಳ ಆರೈಕೆ ಕೇಂದ್ರಗಳಲ್ಲಿ ಕಡ್ಡಾಯವಾಗಿ ವೈದ್ಯರು ಲಭ್ಯವಿರಬೇಕು. ಮಕ್ಕಳ ವೈದ್ಯರು ಲಭ್ಯವಿಲ್ಲದಿದ್ದರೆ ತಕ್ಷಣ ನೇಮಕಾತಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಮಹಾರಾಷ್ಟ್ರದ ಗಡಿ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಹೆಚ್ಚಿದೆ. ಅಲ್ಲಿಂದ ರೋಗಿಗಳು ಚಿಕಿತ್ಸೆಗೆಂದು ಬೀದರ್ ಜಿಲ್ಲೆಗೆ ಬರುತ್ತಿದ್ದಾರೆ. ಅವರೂ ಮೇಲೆ ನಿಗಾ ಇಟ್ಟು ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಬುಧವಾರ ಜಿಲ್ಲೆಯಲ್ಲಿ 22 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 303 ಸಕ್ರೀಯ ಪ್ರಕರಣಗಳಿವೆ.
ರೆಮಿಡಿಸಿವಿರ್ ಹಾಗೂ ಆಕ್ಸಿಜನ್ ಲಭ್ಯತೆ ಇದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೆ 21 ಕಪ್ಪು ಶಿಲೀಂಧ್ರ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 10 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಲಸಿಕೆ ನೀಡುವ ಕಾರ್ಯ ಮುಂದುವರಿದಿದೆ. 193340 ಜನರಿಗೆ ಮೊದಲ ಹಾಗೂ 56525 ಮಂದಿಗೆ ಎರಡನೇ ಲಸಿಕೆ ಕೊಡಲಾಗಿದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.