ಭಾಲ್ಕಿ: ‘ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ, ಬೇಸಿಗೆ ಶಿಬಿರಗಳು ಪೂರಕವಾಗಿವೆ’ ಎಂದು ಗ್ರೇಡ್ -2 ತಹಶೀಲ್ದಾರ್ ಪಲ್ಲವಿ ಬೆಳಕೀರೆ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ 7ರಿಂದ 10ನೇ ತರಗತಿಗಳ ವಿದ್ಯಾರ್ಥಿಗಳಿಗಾಗಿ ಜಿಲ್ಲಾಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಆಯೋಜಿಸಿದ್ದ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
‘ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳು ಪಠ್ಯಕ್ಕೆ ಮಾತ್ರ ಸೀಮಿತವಾಗಿರುವರು. ಹಾಗಾಗಿ, ಬೇಸಿಗೆ ಸಮಯದಲ್ಲಿ, ವಿದ್ಯಾರ್ಥಿಗಳಿಗಾಗಿ ಸರ್ಕಾರ ಶಿಬಿರ ಆಯೋಜಿಸಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ. ಶಿಬಿರದಲ್ಲಿ ಉತ್ತಮ ಚಟುವಟಿಕೆಗಳು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು ಉತ್ತೇಜಿಸಲಾಗುವುದು’ ಎಂದು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೋಳ್ಕರ್ ಮಾತನಾಡಿ,‘ಬೇಸಿಗೆ ಶಿಬಿರದಲ್ಲಿ ಸುಮಾರು 100 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೂ ಪಠ್ಯಕ್ರಮ ಹೊರತು ಪಡಿಸಿ, ಸಂಗೀತ, ಚಿತ್ರಕಲೆ, ಯೋಗಾಭ್ಯಾಸ, ದೈಹಿಕ ವ್ಯಾಯಾಮ, ಧ್ಯಾನ ಸೇರಿದಂತೆ ಹಲವಾರು ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಲಾಗುತ್ತಿದೆ’ ಎಂದು ಹೇಳಿದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ದತ್ತು ಕಾಟ್ಕರ್ ವಿಶೇಷ ಉಪನ್ಯಾಸ ಮಂಡಿಸಿದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಾಧವರಾವ್ ಭೋಸಲೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ವೇಳೆ ಚಿತ್ರಕಲಾ ಶಿಕ್ಷಕ ಜಿಪ್ಸನ್ ಕೋಟೆ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣಾಧಿಕಾರಿ ರೋಹಿದಾಸ ರಾಠೋಡ್, ವಿಶ್ವನಾಥ ಟೋಕರೆ, ಇಸಿಓ ಸಹದೇವ ಗೌಡಗಾವೆ, ಅನುದಾನಿತ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಕಿರಣಕುಮಾರ ಭಾಟಸಾಂಗವಿ, ಪತ್ರಕರ್ತರ ಸಂಘದ ಅಧ್ಯಕ್ಷ ಜಯರಾಜ ದಾಬಶೆಟ್ಟಿ, ಬಿಆರ್ಪಿ ಸಂತೋಷ ಮುದಾಳೆ, ಚೇತನಾ ಸಂತೋಷಕುಮಾರ ಉಪಸ್ಥಿತರಿದ್ದರು.
ಸಿಆರ್ಪಿ ಅಂಬ್ರೀಶ್ ಖಂಡ್ರೆ ಸ್ವಾಗತಿಸಿದರು. ಬಿಆರ್ಪಿ ಚೇತನಾ ಚನಶೆಟ್ಟಿ ನಿರೂಪಿಸಿದರು. ಸಿಆರ್ಪಿ ಚನ್ನಪ್ಪ ತಳವಾಡೆ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.