ADVERTISEMENT

ಪಶುಮೇಳ: ಸ್ಥಳ ಪರಿಶೀಲನೆ

ಕುರಿ, ಕೋಳಿಗಳ ಪ್ರದರ್ಶನಕ್ಕೂ ಆದ್ಯತೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2020, 12:10 IST
Last Updated 15 ಜನವರಿ 2020, 12:10 IST
ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ರೀಡಾಂಗಣದ ಆವರಣದಲ್ಲಿ ಪಶು ಮೇಳ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಸ್ಥಳ ವೀಕ್ಷಿಸಿದರು
ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ರೀಡಾಂಗಣದ ಆವರಣದಲ್ಲಿ ಪಶು ಮೇಳ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಸ್ಥಳ ವೀಕ್ಷಿಸಿದರು   

ಬೀದರ್: ತಾಲ್ಲೂಕಿನ ಕಮಠಾಣಾ ಸಮೀಪದ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ರೀಡಾಂಗಣದ ಆವರಣದಲ್ಲಿ ರಾಜ್ಯಮಟ್ಟದ ಪಶುಮೇಳ ಆಯೋಜಿಸಲು ನಿರ್ಧರಿಸಿರುವ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು.

‘ಪಶು ಮೇಳಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಬರಲಿದ್ದಾರೆ. ಮೇಳದಲ್ಲಿ ನಡೆಯುವ ಉಪನ್ಯಾಸ ಗೋಷ್ಠಿಗಳನ್ನು ರೈತರು ಆಲಿಸಲು ಅನುಕೂಲವಾಗುವಂತೆ ಆಸನಗಳ ವ್ಯವಸ್ಥೆ ಮಾಡಬೇಕು. ಜಾನುವಾರು ಪ್ರದರ್ಶನ ಮಳಿಗೆ, ವಾಣಿಜ್ಯ ಮಳಿಗೆ ಹಾಗೂ ವಿವಿಧ ಇಲಾಖೆಗಳ ಮಳಿಗೆಗಳನ್ನು ತೆರೆಯಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಕಾರ್ಯಕ್ರಮಕ್ಕೆ ಬರುವ ಜನರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಸಾಧ್ಯವಾದರೆ ರೈತರಿಗೆ ಸ್ಥಳದಲ್ಲಿ ಊಟದ ವ್ಯವಸ್ಥೆಯನ್ನೂ ಮಾಡಬೇಕು’ ಎಂದರು.

ADVERTISEMENT

‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮೇಳದ ಉದ್ಘಾಟನೆ ಬರುವ ಕಾರಣ ಲಕ್ಷಾಂತರ ಜನರು ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮದ ಸ್ಥಳದಲ್ಲಿ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಈಗಿನಿಂದಲೇ ಸಿದ್ಧತೆ ಕಾರ್ಯವನ್ನು ಆರಂಭಿಸಬೇಕು’ ಎಂದರು.

ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪೂರೆ, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತ ನಟೇಶ್, ನಿರ್ದೇಶಕ ಡಾ.ಎಂ.ಟಿ.ಮಂಜುನಾಥ, ಹೆಚ್ಚುವರಿ ನಿರ್ದೇಶಕ ಡಾ.ಮಂಜುನಾಥ ಪಾಳೆಗಾರ್, ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ, ವಿಶ್ವವಿದ್ಯಾಲಯದ ಕುಲಸಚಿವ ಡಾ.ವೀರಣ್ಣ, ಡಾ.ಶಿವಪ್ರಕಾಶ, ಡಾ.ಎನ್.ಎ.ಪಾಟೀಲ, ಡಾ.ದಿಲೀಪಕುಮಾರ, ರಾಮಪ್ಪ ಕೊರವಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.