ಔರಾದ್: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ತಾಲ್ಲೂಕಿನ ವಿವಿಧ ಅಂಗನವಾಡಿಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಜೋಜನಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಕುರಿತು ಮಾಹಿತಿ ಪಡೆದರು. ಸೂಕ್ತ ಮಾಹಿತಿ ನೀಡದ ಕಾರ್ಯಕರ್ತೆಯನ್ನು ತರಾಟೆಗೆ ತೆಗೆದುಕೊಂಡು ಸರಿಯಾಗಿ ಕೆಲಸ ಮಾಡುವಂತೆ ಸೂಚಿಸಿದರು.
ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ನೀಡುವಂತೆ ಸ್ಥಳದಲ್ಲಿದ್ದ ತಾಲ್ಲೂಕು ಪಂಚಾಯಿತಿ ಮುಖ್ಯಾಧಿಕಾರಿ ಮಾಣಿಕರಾವ್ ಪಾಟೀಲ ಅವರಿಗೆ ಸೂಚಿಸಿದರು. ಅದೇ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಿಕ್ಷಕರ ಹಾಜರಿ ಪುಸ್ತಕ ಪರಿಶೀಲಿಸಿದರು. ಬಿಸಿಯೂಟ ವ್ಯವಸ್ಥೆ, ಮಕ್ಕಳ ಪಾಠದ ಕುರಿತು ಮಾಹಿತಿ ಪಡೆದುಕೊಂಡರು.
ನಂತರ ಕೊರೆಕಲ್, ಎಕಂಬಾ ಗ್ರಾಮಗಳಿಗೆ ಭೇಟಿ ನೀಡಿ ಶುದ್ಧ ಕುಡಿವ ನೀರಿನ ಘಟಕಗಳು ಪರಿಶೀಲಿಸಿದರು. ತಾಲ್ಲೂಕಿನಲ್ಲಿ ಅಳವಡಿಸಲಾದ ಎಲ್ಲ ನೀರಿನ ಘಟಕಗಳು ವಾರದಲ್ಲಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಈ ವಿಷಯದಲ್ಲಿ ಜನರಿಂದ ದೂರು ಬಂದರೆ ಸಂಬಂಧಿತ ಪಿಡಿಒ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. ತಾಲ್ಲೂಕು ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಉದ್ಯೋಗ ಖಾತರಿ, ಮನೆಗಳ ಕಾಮಗಾರಿ ಕುರಿತು ಮಾಹಿತಿ ಪಡೆದುಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.