
ಹುಮನಾಬಾದ್: ‘ತಾಲ್ಲೂಕಿನಲ್ಲಿ ಅಕ್ರಮ ಮರಳು ಮತ್ತು ಗಣಿಗಾರಿಕೆ ತಡೆಯಲು ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಬಸವಕಲ್ಯಾಣ ಉಪವಿಭಾಗಾಧಿಕಾರಿ ಪ್ರಕಾಶ್ ಕುದ್ರೆ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟು ಅನಧೀಕೃತ ಮರಳು ಸಾಗಾಣಿಕೆ ಆಗದಂತೆ ನಿಗಾ ವಹಿಸಬೇಕು’ ಎಂದರು.
‘ತಾಲ್ಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ರಚಿಸಿ ಹೆಚ್ಚಿನ ಪ್ರಮಾಣದ ಲೋಡ್ಗಳನ್ನು ಹೊಂದಿರುವ ಮರಳು ವಾಹನಗಳನ್ನು ತಡೆದು ವಿಚಾರಣೆ ನಡೆಸಬೇಕು. ಶೀಘ್ರದಲ್ಲೇ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್ ಕೆ.ಗ್ರಾಮದ ಹತ್ತಿರದ ಚೆಕ್ ಪೋಸ್ಟ್ ತೆರೆಯಲಾಗುವುದು’ ಎಂದರು.
ತಹಶೀಲ್ದಾರ್ ಅಂಜುಂ ತಬಸುಮ್ ಮಾತನಾಡಿ, ‘ಅಕ್ರಮ ಮರಳು ಮತ್ತು ಗಣಿಗಾರಿಕೆ ತಡೆಗಟ್ಟಲು ಕಾನೂನನ್ನು ಸರಿಯಾಗಿ ಬಳಸಿಕೊಂಡು ಕ್ರಮ ಕೈಗೊಳ್ಳಲಾಗುವುದು’ ಎಂದರು.
ಚಿಟಗುಪ್ಪ ತಹಶೀಲ್ದಾರ್ ಮಂಜುನಾಥ್ ಪಂಚಾಳ್, ಡಿವೈಎಸ್ಪಿ ಮಡೋಳಪ್ಪ, ತಾಪಂ ಇಒ ದಿಪೀಕಾ ನಾಯ್ಕರ್, ಪಿಎಸ್ಐ ಸುರೇಶ್ ಕುಮಾರ್ ಚೌಹಾಣ್, ಲೋಕೋಪಯೋಗಿ ಇಲಾಖೆ ಎಇಇ ವೆಂಕಟ್ ಸಿಂಧೆ, ಅರಣ್ಯಾಧಿಕಾರಿ ಐಶ್ವರ್ಯ, ಚಿಟಗುಪ್ಪ ಅರಣ್ಯಾಧಿಕಾರಿ ವೀರಯ್ಯ ಸ್ವಾಮಿ, ಮೋಟಾರು ನಿರೀಕ್ಷಕ ಇಲಾಖೆ, ಜಲ ಸಂಪನ್ಮೂಲ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಹಾಯಕ ಪರಿಸರ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.