ADVERTISEMENT

ನೂತನ ಅನುಭವ ಮಂಟಪಕ್ಕೆ ₹ 100 ಕೋಟಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2020, 16:06 IST
Last Updated 7 ಫೆಬ್ರುವರಿ 2020, 16:06 IST
ಬೀದರ್‌ನ ಜಿಲ್ಲಾ ರಂಗ ಮಂದಿರಕ್ಕೆ ಡಾ.ಚನ್ನಬಸವ ಪಟ್ಟದ್ದೇವರ ಹೆಸರು ನಾಮಕರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ. ಬಿ.ಎಸ್.ಯಡಿಯೂರಪ್ಪ ಮಾತನಾಡಿದರು
ಬೀದರ್‌ನ ಜಿಲ್ಲಾ ರಂಗ ಮಂದಿರಕ್ಕೆ ಡಾ.ಚನ್ನಬಸವ ಪಟ್ಟದ್ದೇವರ ಹೆಸರು ನಾಮಕರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ. ಬಿ.ಎಸ್.ಯಡಿಯೂರಪ್ಪ ಮಾತನಾಡಿದರು   

ಬೀದರ್: ‘ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಬಜೆಟ್‌ನಲ್ಲಿ ₹100 ಕೋಟಿ ಅನುದಾನ ಕಾಯ್ದಿರಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದರು.

ನಗರದಲ್ಲಿ ಶುಕ್ರವಾರ ಜಿಲ್ಲಾ ರಂಗ ಮಂದಿರಕ್ಕೆ ಡಾ.ಚನ್ನಬಸವ ಪಟ್ಟದ್ದೇವರ ಹೆಸರು ನಾಮಕರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹಿಂದಿನ ಸರ್ಕಾರದಲ್ಲಿ ಪ್ರಸ್ತಾಪಿಸಿದ್ದ ₹ 600 ಕೋಟಿ ಅನುದಾನದಲ್ಲಿ ಈಗಾಗಲೇ ₹ 50 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದರು.

ADVERTISEMENT

‘ನೂತನ ಅನುಭವ ಮಂಟಪಕ್ಕಾಗಿ ಗೋ.ರು.ಚನ್ನಬಸಪ್ಪ ಅವರು ಸಲ್ಲಿಸಿದ ವರದಿಯನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರಲಾಗುವುದು. ಅನುಭವ ಮಂಟಪ ನಿರ್ಮಾಣ ಸಮಿತಿಯ ಜವಾಬ್ದಾರಿಯನ್ನು ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಅವರಿಗೆ ವಹಿಸಲಾಗುವುದು’ ಎಂದು ತಿಳಿಸಿದರು.

‘ಕನ್ನಡ ನಾಡು, ನುಡಿಗಾಗಿ ಶ್ರಮಿಸಿದ ಡಾ.ಚೆನ್ನಬಸವ ಪಟ್ಟದ್ದೇವರ ಹೆಸರನ್ನು ಜಿಲ್ಲಾ ರಂಗಮಂದಿರಕ್ಕೆ ನಾಮಕರಣ ಮಾಡುತ್ತಿರುವುದು ನನ್ನ ಪುಣ್ಯ’ ಎಂದು ಸಂತಸ ವ್ಯಕ್ತಪಡಿಸಿದರು.

‘ಡಾ.ಚನ್ನಬಸವ ಪಟ್ಟದ್ದೇವರ ದಾರಿಯಲ್ಲೇ ನಡೆಯುತ್ತಿರುವ ಬಸವಲಿಂಗ ಪಟ್ಟದ್ದೇವರ ಕಾರ್ಯವೂ ಶ್ಲಾಘನೀಯವಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಸಂಸದ ಭಗವಂತ ಖೂಬಾ, ಶಾಸಕರಾದ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ, ಬಂಡೆಪ್ಪ ಕಾಂಶೆಂಪೂರ್‌, ಬಿ.ನಾರಾಯಣರಾವ್, ವಿಧಾನ ಪರಿಷತ್‌ ಸದಸ್ಯ ರಘುನಾಥರಾವ್ ಮಲ್ಕಾಪೂರೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.