ADVERTISEMENT

ಬೀದರ್| ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡಿ: ಮಲ್ಲಯ್ಯಗಿರಿ ಆಶ್ರಮದ ಪೀಠಾಧಿಪತಿ

ಸಿದ್ಧಗಂಗಾ ಶ್ರೀ ಪುಣ್ಯಸ್ಮರಣೆ, ಶಿವಕುಮಾರ ಪಾಟೀಲ ತೇಗಂಪೂರಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2020, 11:31 IST
Last Updated 22 ಜನವರಿ 2020, 11:31 IST
ಸಂಘಸಿರಿ ಪ್ರಶಸ್ತಿ ಪುರಸ್ಕೃತ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪೂರ ದಂಪತಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು
ಸಂಘಸಿರಿ ಪ್ರಶಸ್ತಿ ಪುರಸ್ಕೃತ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪೂರ ದಂಪತಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು   

ಬೀದರ್: ‘ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿದ್ದಲ್ಲಿ ಮಾತ್ರ ಶರಣ ಸಂಸ್ಕೃತಿಯ ಉಳಿವು ಸಾಧ್ಯವಿದೆ’ ಎಂದು ತೆಲಂಗಾಣದ ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ಹೇಳಿದರು.

ನಗರದ ಶಿವನಗರದ ಅಕ್ಕ ಮಹಾದೇವಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಶಿವಕುಮಾರ ಸ್ವಾಮೀಜಿ ಅವರ ಪ್ರಥಮ ಪುಣ್ಯಸ್ಮರಣೆ ಹಾಗೂ ಮಠದ ಸಂಘಸಿರಿ ಪ್ರಶಸ್ತಿ ಪುರಸ್ಕೃತ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪೂರ ಅವರ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ನಮ್ಮ ಬದುಕು ಇತರರು ಅನುಕರಿಸುವಂತಿರಬೇಕು. ಪರೋಪಕಾರದ ಗುಣಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ಬಸವಣ್ಣನವರ ಕಾಯಕ ಹಾಗೂ ದಾಸೋಹ ತತ್ವವನ್ನು ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದಿದ್ದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಮಠಾಧೀಶರಿಗೆ ಪ್ರೇರಣೆಯಾಗಿದ್ದಾರೆ’ ಎಂದು ಬಣ್ಣಿಸಿದರು.

‘ಶಿವಕುಮಾರ ಸ್ವಾಮೀಜಿ ನಿಜವಾದ ಸಂತರಾಗಿದ್ದರು. ನುಡಿದಂತೆ ನಡೆದು ತೋರಿದ್ದರು. ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಅನ್ನ, ಅರಿವೆ, ಆಸರೆಯೊಂದಿಗೆ ಶಿಕ್ಷಣ ನೀಡಿದ್ದರು. ಸ್ವಾಮೀಜಿ ಅವರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ಕರ್ನಾಟಕ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರ ಮಾತನಾಡಿ, ‘ರಾಜ್ಯದಲ್ಲಿ ಮಠ ಮಾನ್ಯಗಳು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಕಾರಣ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ದೊರಕುತ್ತಿದೆ. ಮಠಗಳು ಯಾವುದೇ, ಜಾತಿ, ಮತ, ಪಂಥದ ಭೇದವಿಲ್ಲದೆ ಮಕ್ಕಳಿಗೆ ಅಕ್ಷರ ದಾಸೋಹ ಮಾಡುತ್ತಿವೆ’ ಎಂದು ಹೇಳಿದರು.

ತುಮಕೂರಿನ ಸಿದ್ಧಗಂಗಾ ಮಠದ ಸಂಘಸಿರಿ ಪ್ರಶಸ್ತಿ ಪುರಸ್ಕೃತ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪೂರ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.

ಪೂಜಾ ಪಟ್ನೆ ಅವರು ಶಿವಕುಮಾರ ಸ್ವಾಮೀಜಿ ಕುರಿತು ಕವನ ವಾಚಿಸಿದರು. ಅಕ್ಷತಾ ಪಾಟೀಲ ನೃತ್ಯ ಪ್ರದರ್ಶಿಸಿದರು.

ಕಸಾಪ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಸುಕಾಲೆ, ಡಾ. ಸಿ. ಆನಂದರಾವ್, ಕನ್ನಡ ಚಲನಚಿತ್ರ ಸಂಗೀತ ನಿರ್ದೇಶಕ ಶ್ರೀಗುರು, ಮಲ್ಲಿಕಾರ್ಜುನ ಪ್ರಭಾ, ಶಾಂತಲಿಂಗ ಸಾವಳಗಿ, ಅಪ್ಪಾರಾವ್ ನವಾಡೆ, ಸಿದ್ಧಾರೆಡ್ಡಿ ನಾಗೂರಾ ಹಾಗೂ ರಮೇಶ ಪಾಟೀಲ ಇದ್ದರು.

ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕರಂಜೆ ನಿರೂಪಿಸಿದರು. ಜಗನ್ನಾಥ ಕಮಲಾಪೂರೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.