ADVERTISEMENT

ಬೀದರ್ ಬಂದ್‍ಗೆ ಕ್ರಿಶ್ಚಿಯನ್ ಅಸೋಸಿಯೇಷನ್ ಬೆಂಬಲ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 14:45 IST
Last Updated 7 ಅಕ್ಟೋಬರ್ 2021, 14:45 IST

ಬೀದರ್: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಹಾಗೂ ಸಚಿವ ಸಂಪುಟದಿಂದ ಪ್ರಭು ಚವಾಣ್ ಅವರನ್ನು ಕೈಬಿಡಲು ಒತ್ತಾಯಿಸಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಅ. 11 ರಂದು ಕರೆ ನೀಡಿರುವ ಬೀದರ್ ಬಂದ್‍ಗೆ ಇಂಡಿಯನ್ ಕ್ರಿಶ್ಚಿಯನ್ ವೆಲ್‍ಫೇರ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿದೆ.

ಸದಾಶಿವ ಆಯೋಗದ ವರದಿ ಸಲ್ಲಿಕೆಯಾಗಿ 9 ವರ್ಷಗಳೇ ಕಳೆದಿವೆ. ಆದರೆ, ಜಾರಿಗೆ ವಿಳಂಬ ಮಾಡಲಾಗುತ್ತಿದೆ. ಸಮಿತಿಯು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವುದು ನ್ಯಾಯ ಸಮ್ಮತವಾಗಿದೆ ಎಂದು ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಸಂಜಯ್ ಜಾಗೀರದಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾದಿಗ ಸಮುದಾಯದ ಸುಮಾರು 50 ಲಕ್ಷ ಜನರಿದ್ದಾರೆ. ಸಮುದಾಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ತೀರಾ ಹಿಂದುಳಿದಿದೆ. ಹೀಗಾಗಿ ಸಮಾಜವನ್ನು ಮುಖ್ಯವಾಹಿನಿಗೆ ತರಲು ಒಳ ಮೀಸಲಾತಿ ಅಗತ್ಯ ಇದೆ ಎಂದು ಪ್ರತಿಪಾದಿಸಿದ್ದಾರೆ.

ADVERTISEMENT

ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಅವರು ಸದಾಶಿವ ಆಯೋಗದ ವರದಿ ಅವೈಜ್ಞಾನಿಕ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಹಿಂದೆ ಆಧಾರ ರಹಿತವಾಗಿದ್ದ ಶಾಸಕ ಗೂಳಿಹಟ್ಟಿ ಶೇಖರ್ ಅವರ ಹೇಳಿಕೆಯನ್ನೂ ಚವಾಣ್ ಸಮರ್ಥಿಸಿದ್ದರು. ಜವಾಬ್ದಾರಿ ಸ್ಥಾನದಲ್ಲಿರುವ ಅವರು ತಮ್ಮ ಹೇಳಿಕೆ ಮೂಲಕ ಒಂದು ಸಮುದಾಯಕ್ಕೆ ನೋವು ಉಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಹಾಗೂ ಪ್ರಭು ಚವಾಣ್ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.