ADVERTISEMENT

ಬೀದರ್‌: ಕಾಂಗ್ರೆಸ್‌ ಅಸಮಾಧಾನಿತರಿಂದ ಕೆಪಿಸಿಸಿ ಅಧ್ಯಕ್ಷರಿಗೆ ದೂರು

ಬೀದರ್‌ ಜಿಲ್ಲೆಗೆ ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಭೇಟಿ

​ಪ್ರಜಾವಾಣಿ ವಾರ್ತೆ
Published 25 ಜೂನ್ 2025, 15:46 IST
Last Updated 25 ಜೂನ್ 2025, 15:46 IST
ಕಾಂಗ್ರೆಸ್‌ ಮುಖಂಡರೂ ಆದ ಮಾಜಿಸಚಿವ ರಾಜಶೇಖರ ಪಾಟೀಲ ಹುಮನಾಬಾದ್‌, ಮಾಜಿ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ಅವರ ನೇತೃತ್ವದಲ್ಲಿ ಬೀದರ್‌ ಜಿಲ್ಲಾ ಕಾಂಗ್ರೆಸ್‌ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿದರು
ಕಾಂಗ್ರೆಸ್‌ ಮುಖಂಡರೂ ಆದ ಮಾಜಿಸಚಿವ ರಾಜಶೇಖರ ಪಾಟೀಲ ಹುಮನಾಬಾದ್‌, ಮಾಜಿ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ಅವರ ನೇತೃತ್ವದಲ್ಲಿ ಬೀದರ್‌ ಜಿಲ್ಲಾ ಕಾಂಗ್ರೆಸ್‌ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿದರು   

ಬೀದರ್‌: ಜಿಲ್ಲೆಯ ಕಾಂಗ್ರೆಸ್‌ ಅಸಮಾಧಾನಿತ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿದರು.

ಕಾಂಗ್ರೆಸ್‌ ಮುಖಂಡರೂ ಆದ ಮಾಜಿಸಚಿವ ರಾಜಶೇಖರ ಪಾಟೀಲ ಹುಮನಾಬಾದ್‌, ಮಾಜಿ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ಅವರ ನೇತೃತ್ವದಲ್ಲಿ ಮುಖಂಡರು, ಶಿವಕುಮಾರ ಅವರನ್ನು ಭೇಟಿಯಾಗಿ ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು. ಬೀದರ್‌ ಜಿಲ್ಲಾ ಕಾಂಗ್ರೆಸ್‌ನಲ್ಲಿ ತಲೆದೋರಿರುವ ಸಮಸ್ಯೆಗಳ ಕುರಿತು ಎಳೆ ಎಳೆಯಾಗಿ ವಿವರಿಸಿದರು ಎಂದು ಗೊತ್ತಾಗಿದೆ.

‘ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಜಿಲ್ಲೆಯಲ್ಲಿ ಏಕಪಕ್ಷೀಯವಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಕಾಂಗ್ರೆಸ್‌ಗಿಂತ ಬಿಜೆಪಿ ಶಾಸಕರ ಮಾತಿಗೆ ಮನ್ನಣೆ ನೀಡುತ್ತಿದ್ದಾರೆ. ಬಿಜೆಪಿ ಶಾಸಕರ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರೂ ಹೆಸರಿಗಷ್ಟೇ ಸೀಮಿತರಾಗಿದ್ದಾರೆ. ಪಕ್ಷ ಸಂಘಟನೆಯ ಕೆಲಸ ಆಗುತ್ತಿಲ್ಲ. ಇದರಿಂದ ಪಕ್ಷದ ನಿಷ್ಠಾವಂತರಿಗೆ ಬೇಸರವಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ ಅವರಿಗೆ ವಿವರಿಸಲಾಗಿದೆ’ ಎಂದು ಹೆಸರು ಹೇಳಲಿಚ್ಛಿಸದ ಪಕ್ಷದ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

‘ಸಚಿವ ರಹೀಂ ಖಾನ್‌ ಕೂಡ ಪಕ್ಷಕ್ಕೂ ತನಗೂ ಯಾವುದೇ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ. ಇಬ್ಬರು ಸಚಿವರ ನಡವಳಿಕೆಯಿಂದ ಕಾಂಗ್ರೆಸ್‌ನ ನಿಷ್ಠಾವಂತರಿಗೆ ಬಹಳ ನೋವಾಗಿದೆ. ಇದರಿಂದ ಪಕ್ಷದ ಮೇಲೆ ಪರಿಣಾಮ ಆಗುತ್ತದೆ. ಇದನ್ನು ಶೀಘ್ರ ಸರಿಪಡಿಸದಿದ್ದರೆ ಪಕ್ಷಕ್ಕೆ ದೊಡ್ಡ ನಷ್ಟ ಉಂಟಾಗುತ್ತದೆ. ಕೂಡಲೇ ಮಧ್ಯಪ್ರವೇಶಿಸಿ ಸರಿಪಡಿಸಬೇಕು. ನಿಷ್ಠಾವಂತರಿಗೆ ಗೌರವ ಸಿಗಬೇಕು. ಏಕಪಕ್ಷೀಯ ನಿರ್ಧಾರಕ್ಕೆ ಬ್ರೇಕ್‌ ಹಾಕಲು ಕೋರಲಾಗಿದೆ. ಇದಕ್ಕೆ ಶಿವಕುಮಾರ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಜಿಲ್ಲೆಗೆ ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಕಳಿಸಿ, ಅದರ ವರದಿ ಆಧರಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಖಂಡಿತವಾಗಿಯೂ ಪಕ್ಷದ ನಿಷ್ಠಾವಂತರಿಗೆ ನ್ಯಾಯ ಸಿಗುವ ವಿಶ್ವಾಸ ಇದೆ’ ಎಂದು ಹೇಳಿದ್ದಾರೆ.

ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ ತಾಳಂಪಳ್ಳಿ, ಕೆಪಿಸಿಸಿ ಸಂಯೋಜಕ ಅಜಮತ್‌ ಪಟೇಲ್‌, ಬೀದರ್‌ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೆಯ ಮೂಲಗೆ, ಮುಖಂಡರಾದ ಪಂಡಿತರಾವ್‌ ಚಿದ್ರಿ, ಅಬ್ದುಲ್‌ ಮನ್ನಾನ್‌ ಸೇಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.