ADVERTISEMENT

ಮೇಹಕರ್ ಏತ ನೀರಾವರಿ ಯೋಜನೆ: ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 4:55 IST
Last Updated 5 ಜುಲೈ 2022, 4:55 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಭಾಲ್ಕಿ: ಸುಮಾರು ₹625 ಕೋಟಿ ರೂ ವೆಚ್ಚದ ಮೇಹಕರ್ ಏತ ನೀರಾವರಿ ಯೋಜನೆಗೆ ನೀರಾವರಿ ನಿಗಮ ಮಂಡಳಿ ಅನುಮೋದನೆ ನೀಡಿರುವುದನ್ನು ಸ್ವಾಗತಿಸುತ್ತೇನೆ. ಕೂಡಲೇ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಬೇಕು ಎಂದು ಶಾಸಕ ಈಶ್ವರ ಖಂಡ್ರೆ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು 2019-20ರ ಆಯವ್ಯಯದಲ್ಲಿ ನನ್ನ ಕನಸಿನ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಮೇಹಕರ ಏತ ನೀರಾವರಿ ಯೋಜನೆಯನ್ನು ಅಂದಿನ ಸರ್ಕಾರದಲ್ಲಿ ಘೋಷಣೆ ಮಾಡಿಸಿದ್ದೆ. ಈ ಯೋಜನೆ ಪೂರ್ಣಗೊಂಡರೇ ಗಡಿ ಭಾಗದ ಸುಮಾರು 30 ಸಾವಿರ ಎಕರೆ ರೈತರ ಜಮೀನಿಗೆ ನೀರು ಹರಿಯಲಿದೆ. ಇದರಿಂದ ಆ ಭಾಗದ ರೈತರು ಆರ್ಥಿಕವಾಗಿ ಪ್ರಗತಿ ಹೊಂದಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿ ಆಗಲಿದೆ ಎಂದು ತಿಳಿಸಿದರು.

ಈ ಯೋಜನೆ ಮೂರ್ನಾಲ್ಕು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು ಯೋಜನೆ ಪೂರ್ಣಗೊಳಿಸುವಂತೆ ವಿಧಾನಸೌಧ ಒಳಗೆ ಮತ್ತು ಹೊರಗೂ ಸಾಕಷ್ಟು ಬಾರಿ ಧ್ವನಿ ಎತ್ತಿದ್ದೇನೆ. ಈಚೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಯೋಜನೆ ನನೆಗುದಿಗೆ ಬಿದ್ದಿರುವ ಬಗ್ಗೆ ಗಮನ ಸೆಳೆದು ಪತ್ರ ಕೂಡ ಬರೆದಿದ್ದೆ. ಅದಕ್ಕೆ ಸಿಎಂ ಅವರು ಯೋಜನೆ ಅನುಷ್ಠಾನದ ಬಗ್ಗೆ ಭರವಸೆ ನೀಡಿದ್ದರು. ಅದರಂತೆ ಸೋಮವಾರ ನಡೆದ ಮಂಡಳಿ ಸಭೆಯಲ್ಲಿ ಯೋಜನೆಗೆ ಅನಮೋದನೆ ಸಿಕ್ಕಿರುವುದು ಸಂತಸ ತರಿಸಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.