ADVERTISEMENT

ಈಶ್ವರ ಖಂಡ್ರೆ, ಬಸವರಾಜ ಜಾಬಶೆಟ್ಟಿ ಬದಲಿಸಲು ಆಗ್ರಹ: ಸಿದ್ದರಾಮಯ್ಯಗೆ ದೂರು

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 14:56 IST
Last Updated 21 ಆಗಸ್ಟ್ 2025, 14:56 IST
<div class="paragraphs"><p>ಬೀದರ್‌ ಜಿಲ್ಲೆಯ ಕಾಂಗ್ರೆಸ್‌ ಮುಖಂಡರು ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು</p></div>

ಬೀದರ್‌ ಜಿಲ್ಲೆಯ ಕಾಂಗ್ರೆಸ್‌ ಮುಖಂಡರು ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ದೂರು ಸಲ್ಲಿಸಿದರು

   

ಬೀದರ್‌: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರ ಕಾರ್ಯವೈಖರಿ ವಿರುದ್ಧ ಸಿಡಿದೆದ್ದಿರುವ ಬೀದರ್‌ ಜಿಲ್ಲೆಯ ಕಾಂಗ್ರೆಸ್‌ ಮುಖಂಡರು ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ದೂರು ಸಲ್ಲಿಸಿದ್ದಾರೆ.

ಮಾಜಿಸಚಿವರೂ ಆದ ಕಾಂಗ್ರೆಸ್‌ ಮುಖಂಡ ರಾಜಶೇಖರ ಪಾಟೀಲ ಹುಮನಾಬಾದ್‌, ವಿಧಾನ ಪರಿಷತ್‌ ಸದಸ್ಯರಾದ ಚಂದ್ರಶೇಖರ ಪಾಟೀಲ, ಭೀಮರಾವ್‌ ಪಾಟೀಲ, ಮಾಜಿ ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ, ಕೆ. ಪುಂಡಲೀಕರಾವ್‌ ನೇತೃತ್ವದಲ್ಲಿ ಜಿಲ್ಲೆಯ ಹಲವು ಮುಖಂಡರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದರು.

ADVERTISEMENT

ಇದೇ ಮುಖಂಡರು ಬೆಂಗಳೂರಿನಲ್ಲಿ ಹಲವು ಸುತ್ತಿನ ಸಭೆ ನಡೆಸಿ, ಉಪಮುಖ್ಯಮಂತ್ರಿಯೂ ಆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಗೂ ಇತ್ತೀಚೆಗೆ ದೂರು ಸಲ್ಲಿಸಿ, ಪಕ್ಷದ ವಿದ್ಯಮಾನಗಳ ಬಗ್ಗೆ ವಿವರಣೆ ನೀಡಿದ್ದರು.

ಬೀದರ್‌ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷ ಉಳಿಯಬೇಕಾದರೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರನ್ನು ಬದಲಿಸಬೇಕು. ಈಗಾಗಲೇ ನಾಮನಿರ್ದೇಶನ ಮಾಡಿದವರ ಹೆಸರುಗಳನ್ನು ಮರು ಪರಿಶೀಲಿಸಿ, ಪಕ್ಷದ ನಿಷ್ಠಾವಂತರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ ‘ಡಿ’ ಗ್ರುಪ್‌ ನೌಕರರ ನೇಮಕಾತಿಯಲ್ಲಿ ಯಾವುದೇ ರೋಸ್ಟರ್‌ ಪಾಲಿಸುತ್ತಿಲ್ಲ. ರಾಜ್ಯ ಸರ್ಕಾರ ಹೊರಡಿಸಿದ ಸುತ್ತೋಲೆಗೂ ಬೆಲೆ ಇಲ್ಲ. ತಾನು ಸೂಚಿಸಿದವರನ್ನೇ ನೇಮಕ ಮಾಡಿಕೊಳ್ಳಬೇಕೆಂದು ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಲ್ಲಿ ಸರ್ಕಾರಿ ಅಧಿಕಾರಿಗಳು ಬಿಜೆಪಿ ಮನಃಸ್ಥಿತಿ ಹೊಂದಿದ್ದಾರೆ. ಇದರಿಂದ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಬಹಳ ಸಮಸ್ಯೆಯಾಗುತ್ತಿದೆ. ಯಾವುದೇ ಕೆಲಸಗಳಾಗುತ್ತಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಜಿಲ್ಲಾಧ್ಯಕ್ಷರು ಯಾವುದೇ ಬ್ಲಾಕ್‌ ಕಾರ್ಯಕಾರಿಣಿ ಅಥವಾ ಬ್ಲಾಕ್‌ ಸಭೆಗಳನ್ನು ನಡೆಸಿಲ್ಲ. ಜಿಲ್ಲಾ ಕಾಂಗ್ರೆಸ್‌ ಸಮಿತಿ ಬಲಪಡಿಸಲು ವಿಫಲರಾಗಿದ್ದಾರೆ. ಜಿಲ್ಲಾಧ್ಯಕ್ಷರು, ಉಸ್ತುವಾರಿ ಸಚಿವರು ಹಾಗೂ ನಾಯಕರ ನಡುವೆ ಸಮನ್ವಯ ಇಲ್ಲ. ಪಕ್ಷದ ಗೆಲುವಿಗೆ ಕಾರಣರಾದ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪಕ್ಷ ಇದನ್ನೆಲ್ಲ ಗಂಭೀರವಾಗಿ ಮನಗಂಡು ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರನ್ನು ಬದಲಾವಣೆ ಮಾಡಿ, ಪಕ್ಷವನ್ನು ಉಳಿಸಬೇಕೆಂದು ಕೋರಿದ್ದಾರೆ.

ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ ತಾಳಂಪಳ್ಳಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಮನ್ನಾನ್‌ ಸೇಠ್‌, ಪಕ್ಷದ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಶಂಕರರೆಡ್ಡಿ ಚಿಟ್ಟಾ,ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ನಾಸೀರ ಖಾನ್‌, ಮುಖಂಡರಾದ ವಿದ್ಯಾಸಾಗರ ಶಿಂಧೆ, ಪಂಡಿತರಾವ್ ಚಿದ್ರಿ, ಗುಂಡು ರೆಡ್ಡಿ, ಅಜ್ಮತ್‌ ಪಟೇಲ್‌, ಪ್ರದೀಪ ವಿ. ಕುಶನೂರ, ಶೇಕ್‌ ಹಾಜಿ ಮನಿಯಾರ, ವೈಜಿನಾಥ ಯಾನಗುಂದೆ, ಬಸಿರೊದ್ದೀನ್‌ ಹಾಲಹಿಪ್ಪರ್ಗಾ, ಬಸವರಾಜ ದೇಶಮುಖ ಚಿಟಗುಪ್ಪ, ಲಕ್ಷ್ಮಣರಾವ್‌ ಬುಳ್ಳಾ ಮತ್ತಿತರರು ಇದ್ದರು.

ಸಚಿವರ ಕ್ಷೇತ್ರದಲ್ಲೇ ಜಾತಿ ನಿಂದನೆ ಪ್ರಕರಣ

ಕಳೆದ ಆರು ತಿಂಗಳಲ್ಲಿ ಜಿಲ್ಲೆಯಲ್ಲಿ ಹನ್ನೊಂದು ಜಾತಿ ನಿಂದನೆ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಹತ್ತು ಪ್ರಕರಣಗಳು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರ ಕ್ಷೇತ್ರದಲ್ಲೇ ನಡೆದಿವೆ. ಎಲ್ಲ ಪ್ರಕರಣಗಳಲ್ಲಿ ಕೌಂಟರ್‌ ಕೇಸ್‌ ದಾಖಲಿಸಲಾಗಿದೆ ಎಂದು ಮುಖಂಡರು ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ದಲಿತ ಸಮುದಾಯದವರು ಪ್ರತಿಭಟಿಸಿದರೆ ಅವರ ವಿರುದ್ಧ ಗೂಂಡಾ ಪ್ರಕರಣ ದಾಖಲಿಸಿ, ರೌಡಿಶೀಟ್‌ ಹಾಕಿಸಲು ಉಸ್ತುವಾರಿ ಸಚಿವರು ಆದೇಶಿಸಿದ್ದಾರೆ ಎಂದು ಪೊಲೀಸ್‌ ಇಲಾಖೆ ಹೇಳಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ಬಿಜೆಪಿ ಶಾಸಕರೊಂದಿಗೆ ಖಂಡ್ರೆ ಹೊಂದಾಣಿಕೆ’

‘ಬೀದರ್‌ ಜಿಲ್ಲೆಯಲ್ಲಿ ಬಿಜೆಪಿ ಶಾಸಕರು ಹಾಗೂ ಆ ಪಕ್ಷದ ಮುಖಂಡರು ಹೇಳಿದ ಕೆಲಸ ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ. ಖಂಡ್ರೆಯವರು ಬಿಜೆಪಿ ಶಾಸಕರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್‌ ಪಕ್ಷದ ನಾಯಕರನ್ನು ಮೂಲೆಗುಂಪು ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಮುಖಂಡರು ಆರೋಪಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಒಂಬತ್ತು ವರ್ಷಗಳ ಕಾಲ ವಿಶ್ವ ಹಿಂದೂ ಪರಿಷತ್‌ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಅವರು ಎಂಟು ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಅವರು ವಿಶ್ವ ಹಿಂದೂ ಪರಿಷತ್‌ ಮನಃಸ್ಥಿತಿಯಿಂದ ಹೊರಬಂದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.