ADVERTISEMENT

ಅಭಿವೃದ್ಧಿಗೆ ಕಾಂಗ್ರೆಸ್‌ ಅಭ್ಯರ್ಥಿ ಬದ್ಧ: ವಿಧಾನಪರಿಷತ್ ಮಾಜಿ ಸದಸ್ಯ ವಿಜಯಸಿಂಗ್

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 7:29 IST
Last Updated 28 ನವೆಂಬರ್ 2021, 7:29 IST
ಬಸವಕಲ್ಯಾಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ದೀಪ ಬೆಳಗಿಸಿದರು
ಬಸವಕಲ್ಯಾಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ದೀಪ ಬೆಳಗಿಸಿದರು   

ಬಸವಕಲ್ಯಾಣ: ‘ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಅವರು ಬರೀ ಶಾಸಕ ರಾಜಶೇಖರ ಪಾಟೀಲ ಅವರ ಸಹೋದರ ಮಾತ್ರ ಅಲ್ಲ. ಅವರು ಎಲ್ಲರ ಸಹೋದರ ಆಗಿದ್ದು, ಅವರ ಜಯ ನಿಶ್ಚಿತ ಎಂಬುದನ್ನು ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಹೇಳಿದರು.

ನಗರದಲ್ಲಿ ಶನಿವಾರ ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನಡೆದ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ನಾನು ಸದಸ್ಯ ಆಗಿದ್ದ ಸ್ಥಾನದಲ್ಲೇ ಭೀಮರಾವ್ ಸ್ಪರ್ಧಿಸಿದ್ದಾರೆ. ಅವರು ಈಗಾಗಲೇ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಹಾಗೂ ಇತರೆ ಸ್ಥಾನಗಳನ್ನು ಅಲಂಕರಿಸಿ ಸೇವೆಗೈದಿದ್ದಾರೆ' ಎಂದರು.

ADVERTISEMENT

‘ಈ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ 50 ಸಾವಿರಕ್ಕಿಂತ ಅಧಿಕ ಮತಗಳು ದೊರೆತಿವೆ. ಇಲ್ಲಿ ಪಕ್ಷಕ್ಕೆ ಮುಂದೆ ಉತ್ತಮ ಭವಿಷ್ಯವಿದೆ. ಕಾರ್ಯಕರ್ತರ ಅನುಕೂಲಕ್ಕಾಗಿ ಮುಂದಿನ ದಿನಗಳಲ್ಲಿ ನನ್ನ ಸಹೋದರ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಅವರು ಇಲ್ಲಿ ಕಚೇರಿ ಆರಂಭಿಸಿ ಕುಂದು ಕೊರತೆ ಆಲಿಸುವರು’ ಎಂದು ಅವರು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿ, ‘ಅನುಭವ ಮಂಟಪ ನಿರ್ಮಾಣದ ಭೂಸ್ವಾಧೀನವೇ ಆಗಿಲ್ಲ. ಆದರೂ ಬಿಜೆಪಿ ಸರ್ಕಾರ ಶೀಘ್ರವೇಮಂಟಪ ನಿರ್ಮಿಸುತ್ತೇವೆ ಎಂದು ಸುಳ್ಳು ಹೇಳುತ್ತಿದೆ’ ಎಂದು ಆರೋಪಿಸಿದರು.

ವಿಧಾನಪರಿಷತ್ ಸದಸ್ಯ ಅರವಿಂದ ಅರಳಿ, ಶಾಸಕ ರಹೀಂಖಾನ್, ಮಾಲಾ ಬಿ.ನಾರಾಯಣರಾವ್, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಎಐಸಿಸಿ ಸದಸ್ಯ ಆನಂದ ದೇವಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠ ರಾಠೋಡ, ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಮಾಜಿ ನಿರ್ದೇಶಕ ಶಿವರಾಜ ನರಶೆಟ್ಟಿ, ಅಮಾನತ್ ಅಲಿ ಮಾತನಾಡಿದರು.

ಮುಖಂಡರಾದ ಶಾಂತಪ್ಪ ಪಾಟೀಲ, ಅರ್ಜುನ ಕನಕ, ಮನೋಹರ ಮೈಸೆ, ನಗರಸಭೆ ಅಧ್ಯಕ್ಷೆ ನಾಹೇದಾ ಸುಲ್ತಾನಾ, ಅಜರಅಲಿ ಇದ್ದರು.

ಚಂದ್ರಶೇಖರ ಪಾಟೀಲ ಮತಯಾಚನೆ

ಜನವಾಡ: ಬೀದರ್ ತಾಲ್ಲೂಕಿನ ಕಮಠಾಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ ಪರ ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ ಅವರು ಮತಯಾಚನೆ ಮಾಡಿದರು.

ಬೀದರ್ ದಕ್ಷಿಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಶೇಖರ ಚನಶೆಟ್ಟಿ ಮಾತನಾಡಿ, ಮಾಜಿ ಶಾಸಕ ಅಶೋಕ ಖೇಣಿ ಅವರ ನೇತೃತ್ವದಲ್ಲಿ ಮನ್ನಾಎಖ್ಖೆಳ್ಳಿಯಲ್ಲಿ ಬೀದರ್ ದಕ್ಷಿಣ ವಿಧಾನಸಭೆ ಕ್ಷೇತ್ರದ ಗ್ರಾಮ ಪಂಚಾಯಿತಿ ಸದಸ್ಯರ ಸಭೆ ಶೀಘ್ರ ನಡೆಸಲಾಗುವುದು ಎಂದು ತಿಳಿಸಿದರು.

ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಕಮಠಾಣ, ಮುಖಂಡರಾದ ಕರೀಂಸಾಬ್ ಕಮಠಾಣ, ಮಸ್ತಾನ್ ನೂರೊದ್ದಿನ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಗೌಸೊದ್ದಿನ್, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪ್ರಮುಖರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.