ಬೀದರ್: ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿದರು.
ಬಿಜೆಪಿ ಮುಖಂಡರು ರಾಜ್ಯದ ಜನ ನೀಡಿರುವ ತೀರ್ಪಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವ ಅವರ ಕನಸು ನನಸಾಗಿಸುವುದಿಲ್ಲ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೆಂಬಲಿಸಿದ್ದಾರೆ. ಆದರೂ ಬಿಜೆಪಿಯವರು ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬರಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿಯವರು ಅನೇಕ ಬಾರಿ ಸರ್ಕಾರ ಬೀಳಿಸುವ ಕೆಲಸಕ್ಕೆ ಕೈಹಾಕಿ ಮುಖಭಂಗ ಅನುಭವಿಸಿದ್ದಾರೆ. ಮುಂದಾದರೂ ಇಂಥ ಕೆಲಸ ಕೈಬಿಡಬೇಕು ಎಂದು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಅಮೃತರಾವ್ ಚಿಮಕೋಡೆ, ರೋಹಿದಾಸ ಘೋಡೆ, ಶಂಕರ ದೊಡ್ಡಿ, ಇರ್ಷಾದ್ ಅಲಿ ಪೈಲ್ವಾನ್, ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಎಐಸಿಸಿ ಸದಸ್ಯ ಆನಂದ ದೇವಪ್ಪ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ, ಎಂ.ಎ. ಸಮಿ, ಕಾರ್ಯದರ್ಶಿ ಪರ್ವೇಜ್ ಕಮಲ್, ಜಿಲ್ಲಾ ಪಂಚಾಯಿತಿ ಸದಸ್ಯೆ ಗೀತಾ ಚಿದ್ರಿ, ಮುಖಂಡರಾದ ಪಂಡಿತರಾವ್ ಚಿದ್ರಿ, ಫಾತಿಮಾ ಅನ್ವರ್ ಅಲಿ, ರಾಜಶೇಖರ ಪಾಟೀಲ ಅಷ್ಟೂರ, ಅಜಮತ್ ಪಟೇಲ್, ಸಂಜುಕುಮಾರ ಡಿ.ಕೆ., ಲತಾ ರಾಠೋಡ್, ಫರೀದ್ ಖಾನ್, ಅಬ್ದುಲ್ ಸತ್ತಾರ್, ಯುಸೂಫ್, ಗೋವರ್ಧನ ರಾಠೋಡ್, ಚಂದ್ರಶೇಖರ ಚನಶೆಟ್ಟಿ, ರುಕ್ಮಾರೆಡ್ಡಿ ಪಾಟೀಲ, ರಾಜಕುಮಾರ ಹಲಬುರ್ಗೆ, ನಾಗನಾಥ ಪಾಟೀಲ, ನಿಸಾರ್ ಅಹಮ್ಮದ್ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.