ಕಟ್ಟಿತೂಗಾಂವ್ ಗ್ರಾಮಕ್ಕೆ ಸಿಐಡಿ ಡಿಐಜಿಪಿ ಶಾಂತನು ಸಿನ್ಹಾ ಭೇಟಿ
ಬೀದರ್: ಮೃತ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರಿಗೆ ಸೇರಿದ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್ ಗ್ರಾಮಕ್ಕೆ ಸಿಐಡಿ ಡಿಐಜಿಪಿ ಶಾಂತನು ಸಿನ್ಹಾ ಅವರು ಮಂಗಳವಾರ ಭೇಟಿ ನೀಡಿದರು.
ಸಚಿನ್ ಆತ್ಮಹತ್ಯೆಗೂ ಮುನ್ನ ಬರೆದ ಡೆತ್ನೋಟ್, ಪೊಲೀಸರಿಗೆ ದೂರು ಕೊಡಲು ಹೋದಾಗ ನಡೆದುಕೊಂಡ ರೀತಿಯನ್ನು ವಿಚಾರಿಸಿ ಮಾಹಿತಿ ಪಡೆದರು. ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಕುಟುಂಬದವರನ್ನು ವಿಚಾರಿಸಿದರು ಎಂದು ಗೊತ್ತಾಗಿದೆ.
ಇದಕ್ಕೂ ಮುನ್ನ ಅವರು ಸಚಿನ್ ಆತ್ಮಹತ್ಯೆ ಮಾಡಿಕೊಂಡ ಬೀದರ್–ಹೈದರಾಬಾದ್ ಮಾರ್ಗದ ರೈಲು ಹಳಿಗೆ ಭೇಟಿ ಕೊಟ್ಟು ಪರಿಶೀಲಿಸಿದರು. ಆನಂತರ ರೈಲ್ವೆ ಪೊಲೀಸರು ಹಾಗೂ ಸಿಐಡಿ ಡಿವೈಎಸ್ಪಿ ಸುಲೇಮಾನ್ ತಹಶೀಲ್ದಾರ್ ಅವರ ಘಟನೆ ಸಂಬಂಧ ಸಂಪೂರ್ಣ ಮಾಹಿತಿ ಪಡೆದರು.
ತನಿಖೆ ಹೇಗೆ ನಡೆಯುತ್ತಿದೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ, ತನಿಖೆ ಪ್ರಗತಿಯಲ್ಲಿದೆ. ಇದರ ಬಗ್ಗೆ ನಾನೇನೂ ಮಾತನಾಡಲಾರೆ ಎಂದು ಹೇಳಿ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿದರು.
ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಸಚಿನ್ ಅವರು ಡೆತ್ನೋಟ್ ಬರೆದಿಟ್ಟು ಡಿ. 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಒಂಬತ್ತು ಜನರ ವಿರುದ್ಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.