ಬೀದರ್: ‘ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಆನ್ಲೈನ್ನಲ್ಲೇ ಕನ್ನಡ ಸಾಹಿತ್ಯ ಪರಿಷತ್ ಅಜೀವ ಸದಸ್ಯತ್ವ ಮಾಡಿಸುವ ವ್ಯವಸ್ಥೆ ಜಾರಿಗೊಳಿಸಲಾಗುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ವ.ಚ. ಚನ್ನೇಗೌಡ ಹೇಳಿದರು.
‘ಶಾಶ್ವತ ಕನ್ನಡ ನಿಘಂಟು ವಿಭಾಗ ಸ್ಥಾಪನೆ, ಇತರ ಭಾಷೆಗಳಿಗೆ ಕನ್ನಡ ಸಾಹಿತ್ಯ ಅನುವಾದ, ಕನ್ನಡ ಶಾಲೆಗಳ ಉಳಿವಿಗೆ ದಿಟ್ಟ ನಿಲುವು, ಕಲಾವಿದರಿಗೆ ಆರೋಗ್ಯ ವಿಮೆ, ಪ್ರತಿ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ಭವನ ನಿರ್ಮಾಣ, ನಾಲ್ಕು ಕಂದಾಯ ವಿಭಾಗಗಳಲ್ಲಿ ಸಮಾವೇಶ ಆಯೋಜನೆ, ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಆದ್ಯತೆಗಳಾಗಲಿವೆ’ ಎಂದು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಗೌರವ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ಹೀಗಾಗಿ ಕನ್ನಡ ಸೇವೆಗೆ ಮತದಾರರು ಅವಕಾಶ ಕೊಡಬೇಕು’ ಎಂದು ಮನವಿ ಮಾಡಿದರು.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿಯ ಮಾಜಿ ಅಧ್ಯಕ್ಷ ಶಿವಪುತ್ರ ಡಿ. ಪಾಟೀಲ, ಉಪಾಧ್ಯಕ್ಷ ರಫೈಲ್ ರಾಜ್, ಜಿಲ್ಲಾ ಕನ್ನಡ ಕ್ರಿಯಾ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಸವರಾಜ ಚಾಮರೆಡ್ಡಿ, ಪ್ರಚಾರ ಕಾರ್ಯದರ್ಶಿ ಜಗನ್ನಾಥ ಶಿವಯೋಗಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.