ADVERTISEMENT

ಜಿಲ್ಲೆಯಲ್ಲಿ ಇನ್ನಷ್ಟು ತಗ್ಗಲಿವೆ ಕೋವಿಡ್ ಪ್ರಕರಣ: ಚವಾಣ್

​ಪ್ರಜಾವಾಣಿ ವಾರ್ತೆ
Published 21 ಮೇ 2021, 4:19 IST
Last Updated 21 ಮೇ 2021, 4:19 IST

ಬೀದರ್: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇನ್ನೂ ಕಡಿಮೆಯಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಸ್ತುತ ಕೋವಿಡ್ ಪ್ರಕರಣಗಳು ತಗ್ಗಿವೆ ಎಂದು ಖುಷಿ ಪಡುವಂತಿಲ್ಲ. ಪ್ರಕರಣಗಳು ಶೂನ್ಯಕ್ಕೆ ಬರುವವರೆಗೆ ಎಲ್ಲರೂ ಒಗ್ಗೂಡಿ ಕರ್ತವ್ಯ ನಿರ್ವಹಿಸಬೇಕಿದೆ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗುರುವಾರ ಜಿಲ್ಲೆಯಲ್ಲಿ 94 ಜನರಿಗೆ ಸೋಂಕು ದೃಢಪಟ್ಟಿದೆ. ಐವರು ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಹೊಸದಾಗಿ 39 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್‍ನಿಂದ ಗುಣಮುಖರಾಗಿ 334 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಮಾಹಿತಿ ನೀಡಿದರು.

ADVERTISEMENT

ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಬೆಡ್, ರೆಮ್‍ಡಿಸಿವರ್ ಕೊರತೆ ಇಲ್ಲ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾ ಪಂಚಾಯಿತಿಯಿಂದ ಉತ್ತಮ ಕಾರ್ಯಗಳು ಆಗುತ್ತಿವೆ ಎಂದರು.

ಮೇ 24ರ ವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಅದರ ನಂತರವೂ ಲಾಕ್‍ಡೌನ್ ಮುಂದುವರೆಸಬೇಕೋ ಬೇಡವೋ ಎನ್ನುವುದನ್ನು ಎರಡು-ಮೂರು ದಿನಗಳಲ್ಲಿ ತೀರ್ಮಾನಿಸಲಾಗುವುದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಇದ್ದರು.

ಮಾಸ್ಕ್ ಧರಿಸದ 1,521 ಜನರ ವಿರುದ್ಧ ಪ್ರಕರಣ

ಬೀದರ್: ಜಿಲ್ಲೆಯಲ್ಲಿ ಗುರುವಾರ ಪೊಲೀಸರು ಮಾಸ್ಕ್ ಧರಿಸದ 1,521 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಸ್ಕ್ ಧರಿಸದವರಿಂದ ಒಟ್ಟು ₹1,52,100 ದಂಡ ವಸೂಲಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದವರ 171 ವಾಹನ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕ ಎಪಿಡಿಮಿಕ್ ಡಿಸೀಸ್ ಆ್ಯಕ್ಟ್ 2020 ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಏಳು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.