ಬೀದರ್: ಬಸವಕಲ್ಯಾಣ– ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಕಾರಣ ರಾಜ್ಯದ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬಸವಕಲ್ಯಾಣ, ಕಮಲನಗರ ಹಾಗೂ ಔರಾದ್ ತಾಲ್ಲೂಕಿನ ಗಡಿಯಲ್ಲಿ ಚೆಕ್ಪೋಸ್ಟ್ಗಳನ್ನು ಪ್ರಾರಂಭಿಸಲಾಗಿದೆ.
ಬಸವಕಲ್ಯಾಣ ತಾಲ್ಲೂಕಿನ ಚಂಡಕಾ ಪುರ ಸಮೀಪ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳನ್ನು ತಡೆದು ಜ್ವರ
ತಪಾಸಣೆ ನಡೆಸಲಾಗುತ್ತಿದೆ ಹಾಗೂ ನೆಗೆಟಿವ್ ಪ್ರಮಾಣಪತ್ರ ಪರಿಶೀಲಿಸಲಾಗುತ್ತಿದೆ.
ಬ್ಯಾರಿಕೇಡ್ ಅಳವಡಿಸಿ ವಾಹನ ತಡೆಯುತ್ತಿರುವ ಕಾರಣ ಹೆದ್ದಾರಿಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿರುವುದು ಕಾಣುತ್ತಿದೆ. ಬಸವಕಲ್ಯಾಣ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರವೀಣ ಹೂಗಾರ ಹಾಗೂ ಮಂಠಾಳ ಠಾಣೆ ಸಬ್ ಇನ್ಸ್ಪೆಕ್ಟರ್ ಜಯಶ್ರೀ ಹೂಡಲ್ ಹಾಗೂ ಸಿಬ್ಬಂದಿ ಸ್ಥಳದಲ್ಲಿದ್ದು ತಪಾಸಣೆ ನಡೆಸುತ್ತಿದ್ದಾರೆ.
ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ, ಕಮಲನಗರ ಹಾಗೂ ಔರಾದ್ ತಾಲ್ಲೂಕಿನ ವನಮಾರಪಳ್ಳಿ ಬಳಿ ಚೆಕ್ಪೋಸ್ಟ್ ಆರಂಭಿಸಲಾಗಿದೆ. ಒಬ್ಬರು ವೈದ್ಯಾಧಿಕಾರಿ, ಆರೋಗ್ಯ ನಿರೀಕ್ಷಕ ಸೇರಿ ಮೂವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಮಹಾರಾಷ್ಟ್ರದಿಂದ ಬರುವ ಜನರ ಮೇಲೆ ಮಾತ್ರ ಹೆಚ್ಚಿನ ನಿಗಾ ಇಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ವಿ.ಜಿ.ರೆಡ್ಡಿ ತಿಳಿಸಿದರು.
‘ಆರೋಗ್ಯ ಸಚಿವರು ವಿಡಿಯೊ ಕಾನ್ಫೆರನ್ಸ್ ನಡೆಸಿ ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ. ಬಂದೋಬಸ್ತ್ಗೆ ಗಡಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಹೇಳಿದರು
ತೆಲಂಗಾಣದಿಂದ ರಾಜ್ಯಕ್ಕೆ ಬರುತ್ತಿರುವ ವ್ಯಕ್ತಿಗಳ ತಪಾಸಣೆ ನಡೆಸುತ್ತಿಲ್ಲ. ತೆಲಂಗಾಣ ಗಡಿಯಲ್ಲಿ ಚೆಕ್ಪೋಸ್ಟ್ ತೆರೆಯುವಂತೆ ರಾಜ್ಯ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಧಿಕಾರಿ ರಾಮಚಂದ್ರನ್ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿ ಗಳ ತುರ್ತು ಸಭೆ ನಡೆಸಿ ಗಡಿಯಲ್ಲಿ ಕಟ್ಟೆ ಚ್ಚರ ವಹಿಸುವಂತೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಮಹೇಶ ಬಿರಾದಾರ, ಡಾ.ಶಿವಶಂಕರ,
ಡಾ.ಕೃಷ್ಣಾ ರೆಡ್ಡಿ, ಡಾ.ಶಿವಶಂಕರ, ಡಾ.ರವಿ ಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.