ADVERTISEMENT

ಭಾರಿ ಮಳೆಯಿಂದ ಶೇ 60ರಷ್ಟು ಬೆಳೆ ಹಾನಿ: ನಿಖರ ಮಾಹಿತಿ ನೀಡಲು ಶಾಸಕ ಚವಾಣ್ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 4:38 IST
Last Updated 13 ಸೆಪ್ಟೆಂಬರ್ 2025, 4:38 IST
ಔರಾದ್ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಪ್ರಭು ಚವಾಣ್, ಅಧಿಕಾರಿಗಳು ಹಾಜರಿದ್ದರು 
ಔರಾದ್ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಪ್ರಭು ಚವಾಣ್, ಅಧಿಕಾರಿಗಳು ಹಾಜರಿದ್ದರು    

ಔರಾದ್: ‘ಎರಡು ವಾರ ಸುರಿದ ಭಾರಿ ಮಳೆಯಿಂದ ಇಡೀ ಜಿಲ್ಲೆಯಲ್ಲಿ ಹೆಚ್ಚು ಹಾನಿಯಾಗಿದ್ದು ಔರಾದ್ ಹಾಗೂ ಕಮಲನಗರ ತಾಲ್ಲೂಕಿನಲ್ಲಿ. ಹೀಗಾಗಿ ಎಲ್ಲೋ ಕುಳಿತು ಸರ್ವೆ ವರದಿ ತಯಾರಿಸಿದರೆ ನಡೆಯುವುದಿಲ್ಲ. ಎಲ್ಲಾ ಕಡೆ ಹೋಗಿ ಸರ್ವೆ ಮಾಡಿ ನಿಖರ ವರದಿ ತಯಾರಿಸಬೇಕು’ ಎಂದು ಶಾಸಕ ಪ್ರಭು ಚವಾಣ್ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಅವರು ಮಾತನಾಡಿದರು. ‘ನದಿ ಪಾತ್ರದ ಗ್ರಾಮಗಳಲ್ಲಿ ಹೆಚ್ಚು ಹಾನಿಯಾಗಿದೆ. ಬೊಂತಿ ಕೆರೆ ಹಾಗೂ ಬಾವಲಗಾಂವ್ ಕೆರೆ ಕೋಡಿ ಒಡೆದು ಸಾವಿರಾರು ಎಕರೆ ಬೆಳೆ ನಷ್ಟವಾಗಿದೆ. ನಾನು ಖುದ್ದಾಗಿ ಎಲ್ಲ ಕಡೆ ಹೋಗಿ ಪರಿಶೀಲನೆ ಮಾಡಿದ್ದೇನೆ. 1 ಲಕ್ಷ ಹೆಕ್ಟೇರ್ ಕೃಷಿ ಭೂಮಿಯ ಪೈಕಿ ಸುಮಾರು 60 ಸಾವಿರ ಹೆಕ್ಟೇರ್‌ಗಿಂತ ಹೆಚ್ಚು ಬೆಳೆ ಹಾನಿಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ಸಮೀಕ್ಷೆಯಲ್ಲಿ ಏನಾದರೂ ತೊಂದರೆ ಆದರೆ ತಾಲ್ಲೂಕಿನ ರೈತರ ಜತೆ ತಾವು ಹೋರಾಟ ಮಾಡಲು ಸಿದ್ಧರಿರುವುದಾಗಿ ಹೇಳಿದರು.

‘ಪ್ರಾಥಮಿಕ ಸರ್ವೆ ಪ್ರಕಾರ ಕ್ಷೇತ್ರದಲ್ಲಿ 30 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಇನ್ನೂ ಸರ್ವೆ ನಡೆಯುತ್ತಿದ್ದು ಪೂರ್ಣಗೊಂಡ ನಂತರ ನಿಖರ ಮಾಹಿತಿ ದೊರೆಯಲಿದೆ’ ಎಂದು ಸಹಾಯಕ ಕೃಷಿ ನಿರ್ದೇಶಕ ಧೂಳಪ್ಪ ಸಭೆಗೆ ಮಾಹಿತಿ ನೀಡಿದರು.

ADVERTISEMENT

‘ಮಳೆ ಹಾನಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ವಿಮೆ ಕಂಪನಿಗಳಿಂದ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಕಂಪನಿಯವರು ತಮ್ಮಷ್ಟಕ್ಕೆ ತಾವೇ ಸಮೀಕ್ಷೆ ಮಾಡದೇ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಎಲ್ಲ ರೈತರಿಗೆ ತಂತ್ರಾಂಶದ ಜ್ಞಾನ ಇರುವುದಿಲ್ಲ. ಹಾಗಾಗಿ ರೈತರಿಗೆ ಆಫ್‌ಲೈನ್ ಮೂಲಕ ಮಾಹಿತಿ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡಬೇಕು’ ಎಂದು ಹೇಳಿದರು.

ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಅವ್ಯವಹಾರಗಳು ಆಗುತ್ತಿವೆ. ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರ ಸಾಮಗ್ರಿಗಳು ಸಂಪೂರ್ಣ ಕಳಪೆಯಿಂದ ಕೂಡಿವೆ. ಅಂಗನವಾಡಿ ನೇಮಕಾತಿಯಲ್ಲಿ ಇಲಾಖೆ ಸಿಬ್ಬಂದಿ ಹಣ ವಸೂಲಿಗೆ ಇಳಿದಿರುವುದು ಗಮನಕ್ಕೆ ಬಂದಿದೆ. ಇದನ್ನೆಲ್ಲ ಸರಿಪಡಿಸುವಂತೆ ಸೂಚಿಸಿದರು.

ತಾಲ್ಲೂಕು ಪಂಚಾಯತ್ ಆಡಳಿತಾಧಿಕಾರಿ ಸೂರ್ಯಕಾಂತ ಬಿರಾದಾರ, ತಹಶೀಲ್ದಾರ್ ಮಹೇಶ ಪಾಟೀಲ, ರಮೇಶ ಪೆದ್ದೆ, ತಾಲ್ಲೂಕು ಪಂಚಾಯತ್ ಇಒ ಕಿರಣ ಪಾಟೀಲ, ಹಣಮಂತರಾವ ಕೌಟಗೆ, ಪ.ಪಂ.ಮುಖ್ಯಾಧಿಕಾರಿ ಸ್ವಾಮಿದಾಸ್, ಸಿಪಿಐ ರಘುವೀರಸಿಂಗ್ ಠಾಕೂರ್ ಸಭೆಯಲ್ಲಿ ಹಾಜರಿದ್ದರು. 

ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಒತ್ತು ನೀಡಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಿಸಬೇಕು. ಗಡಿ ಭಾಗದ ಎಲ್ಲ ಕಡೆ ಕನ್ನಡ ಮಾಧ್ಯಮ ಶಾಲೆ ಹಾಗೂ ಕನ್ನಡ ಶಿಕ್ಷಕರನ್ನು ನೇಮಿಸಬೇಕು.
– ಪ್ರಭು ಚವಾಣ್ ಶಾಸಕರು ಔರಾದ್

ಅಧಿಕಾರಿಗಳಿಂದ ಕಡೆಗಣನೆ: ಶಾಸಕರ ಆಕ್ಷೇಪ

‘ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕೆಲ ಅಧಿಕಾರಿಗಳು ತಮ್ಮನ್ನು ಕಡೆಗಣಿಸುತ್ತಿದ್ದಾರೆ’ ಎಂದು ಶಾಸಕ ಪ್ರಭು ಚವಾಣ್ ಆಕ್ಷೇಪ ವ್ಯಕ್ತಪಡಿಸಿದರು. ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ಬೆಳೆ ಹಾನಿ ವೀಕ್ಷಣೆಗೆ ಬಂದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ನಾನು ಅಭಿನಂದಿಸುತ್ತೇನೆ. ಆದರೆ ಅವರಾಗಲಿ ಜಿಲ್ಲಾ ಮಟ್ಟದ ಅಧಿಕಾರಿಗಳಾಗಲಿ ಇಲ್ಲಿಗೆ ಬರುವ ಮಾಹಿತಿ ನನಗೆ ನೀಡಿಲ್ಲ. ನೀವಾದರೂ ನೀಡಬೇಕಿತ್ತಲ್ಲ ಎಂದು ಸಭೆಯಲ್ಲಿದ್ದ ತಹಶೀಲ್ದಾರ್ ಮಹೇಶ ಪಾಟೀಲ ಅವರನ್ನು ಕೇಳಿದರು. ಹೇಳಿದ್ದರೆ ನಾನೂ ಅವರ ಜತೆ ಬರುತ್ತಿದ್ದೆ. ಸರ್ಕಾರದ ಯೋಜನೆ ಜನರಿಗೆ ತಲುಪಿಸುವಲ್ಲಿಯೂ ನನಗೆ ಮಾಹಿತಿ ನೀಡುತ್ತಿಲ್ಲ. ಅಧಿಕಾರಿಗಳು ತಮ್ಮ ಈ ನಿಲುವು ಬದಲಿಸಿಕೊಳ್ಳಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.