ADVERTISEMENT

ಬೀದರ್‌ | ಕಲಾವಿದರು ಸಂಸ್ಕೃತಿಯ ಜೀವಂತ ಕೊಂಡಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2025, 6:15 IST
Last Updated 20 ಸೆಪ್ಟೆಂಬರ್ 2025, 6:15 IST
   

ಕಮಠಾಣ (ಜನವಾಡ): ಕಲಾವಿದರು ಸಂಸ್ಕೃತಿ, ಪರಂಪರೆ ಹಾಗೂ ಇತಿಹಾಸದ ಜೀವಂತ ಕೊಂಡಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಕಲಾವಿದನೂ ತನ್ನದೇ ಆದ ಗುರುತು ಹೊಂದಿರುತ್ತಾನೆ. ಕಲೆ ಸಮಾಜಕ್ಕೆ ಹೊಸ ಚೈತನ್ಯ, ಮನರಂಜನೆ ಜತೆಗೆ ಸಂಸ್ಕಾರವನ್ನೂ ನೀಡುತ್ತದೆ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ‘ಕನ್ನಡಕ್ಕೆ ಶ್ರೇಷ್ಠ ಪರಂಪರೆ ಇದೆ. ಅದನ್ನು ಮುಂದುವರಿಸಿಕೊಂಡು ಹೋಗುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಜಾಗತೀಕರಣದ ಸಂದರ್ಭದಲ್ಲಿ ಕನ್ನಡದ ಪ್ರಭಾವ ಉಳಿಸಬೇಕಾಗಿದೆ’ ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸದಸ್ಯ ಬಸವರಾಜ ಭತಮುರ್ಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಮಾತನಾಡಿದರು.

ಬೀದರ್ ವಿಶ್ವವಿದ್ಯಾಲಯದ ಕುಲಸಚಿವೆ ಸುರೇಖಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಬುರಗಿ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ವಿಶ್ವವಿದ್ಯಾಲಯದ ಕುಲಸಚಿವ ಡಾ. ಪಿ.ಟಿ. ರಮೇಶ, ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಡೀನ್ ಡಾ.ಎಂ.ಕೆ. ತಾಂಡ್ಲೆ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ, ಡಾ. ಚನ್ನಪ್ಪಗೌಡ ಬಿರಾದಾರ ಉಪಸ್ಥಿತರಿದ್ದರು.

ಗಮನ ಸೆಳೆದ ಕಲಾ ಪ್ರದರ್ಶನ

ಸಾಂಸ್ಕೃತಿಕ ಸೌರಭದಲ್ಲಿ ಕಲಾ ತಂಡಗಳ ಪ್ರದರ್ಶನ ಸಭಿಕರ ಗಮನ ಸೆಳೆಯಿತು. ಗೊಲ್ಲಹಳ್ಳಿ ಶಿವಪ್ರಸಾದ್ ಮತ್ತು ತಂಡ ಜಾನಪದ ಗೀತೆ, ಉಷಾ ಪ್ರಭಾಕರ ಹಾಗೂ ತಂಡ ಸಮೂಹ ನೃತ್ಯ, ಸಂಜೀವ್ ಮತ್ತು ತಂಡ ಡೊಳ್ಳು ಕುಣಿತ, ಸುನೀಲ್ ಮಣ್ಣೂರ ತಂಡದ ಚರ್ಮ ವಾದ್ಯ, ಬಾಲರಾಜ ತಂಡದ ಕಥಾ ಕೀರ್ತನ, ರಾಮದಾಸ ಮಹಾರಾಜ ತಂಡದ ನಾಟಕ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ತಂಡದ ಸುಗಮ ಸಂಗೀತ, ಜಗನ್ನಾಥ ನಾನಕೇರಿ ಅವರ ಶಾಸ್ತ್ರೀಯ ಸಂಗೀತ ಎಲ್ಲರ ಮನ ತಣಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.