ಬೀದರ್: ಆಂಧ್ರಪ್ರದೇಶ ಮಾದರಿಯಲ್ಲಿ ರಾಜ್ಯದಲ್ಲೂ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಗುರುತಿನ ಚೀಟಿ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಸರ್ಕಾರವನ್ನು ಆಗ್ರಹಿಸಿದೆ.
ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲಕುಮಾರ ಅವರನ್ನು ಭೇಟಿ ಮಾಡಿದ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನೆಳ್ಳಿ ಅವರು ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟವನ್ನು ಶಾಶ್ವತ ಅನುದಾನ ಪಡೆಯುವ ಸಂಸ್ಥೆಯನ್ನಾಗಿ ಪರಿಗಣಿಸಬೇಕು. ಜಯದೇವಿ ತಾಯಿ ಲಿಗಾಡೆ, ಎಸ್.ಎಂ. ಪಂಡಿತ, ಎಂ.ಆರ್. ಬುದ್ಧಿವಂತ ಶೆಟ್ಟರ್, ಪಂಡಿತ ಸಿದ್ಧರಾಮ ಜಂಬಲದಿನ್ನಿ, ಡಾ. ಸಿದ್ಧಯ್ಯ ಪುರಾಣಿಕ, ಡಾ. ಸುಭದ್ರಮ್ಮ ಮನಸೂರು, ಎಂ.ಪಿ. ಪ್ರಕಾಶ ಹೆಸರಲ್ಲಿ ಟ್ರಸ್ಟ್ ಸ್ಥಾಪಿಸಬೇಕು. ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ರಚಿಸಬೇಕು. ಕಲಾವಿದರ ಮಾಸಾಶನ ₹ 2 ಸಾವಿರದಿಂದ ರೂ. 5 ಸಾವಿರಕ್ಕೆ ಹೆಚ್ಚಿಸಬೇಕು. ಮಾಸಾಶನ ವಯೋಮಿತಿ 58 ರಿಂದ 50 ವರ್ಷಕ್ಕೆ ಇಳಿಸಬೇಕು. ಸರ್ಕಾರಿ ಶಾಲೆಗಳಲ್ಲಿ ರಂಗ, ಸಂಗೀತ ಶಿಕ್ಷಕರನ್ನು ನೇಮಿಸಬೇಕು. ವಸತಿ ಶಾಲೆಗಳಲ್ಲಿ ಜನಪದ ಶಿಕ್ಷಕರ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.