ADVERTISEMENT

ಮಾರುಕಟ್ಟೆ ಶುಲ್ಕ ಹೆಚ್ಚಳ ಹಿಂಪಡೆಯಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 12:35 IST
Last Updated 19 ಡಿಸೆಂಬರ್ 2020, 12:35 IST

ಬೀದರ್: ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕ ಹೆಚ್ಚಳವನ್ನು ಕೈಬಿಡಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಗ್ರಹಿಸಿದೆ.

ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್ ಹಾಗೂ ಕಾರ್ಯದರ್ಶಿ ಡಾ. ವೀರೇಂದ್ರ ಶಾಸ್ತ್ರಿ ಅವರು ಈ ಕುರಿತು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಎಸ್.ಟಿ. ಸೋಮಶೇಖರ ಅವರಿಗೆ ಪತ್ರ ಬರೆದಿದ್ದಾರೆ.

ಮಾರುಕಟ್ಟೆ ಶುಲ್ಕವನ್ನು ಶೇ 0.35 ಪೈಸೆಯಿಂದ ಶೇ 1ಕ್ಕೆ ಏರಿಕೆ ಮಾಡಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಕೃಷಿ ಉತ್ಪನ್ನ ವಹಿವಾಟಿಗೆ ಸಂಬಂಧಿಸಿದ ಮಾರ್ಗಸೂಚಿಯ ಪ್ರಕಾರ ಮಾರುಕಟ್ಟೆ ಪ್ರಾಂಗಣದ ಹೊರಗೆ ನಡೆಯುವ ವಹಿವಾಟಿನ ಮೇಲೆ ಯಾವುದೇ ನಿಯಂತ್ರಣವಾಗಲಿ, ಶುಲ್ಕವಾಗಲಿ ಇಲ್ಲ. ಆದರೆ, ಮಾರುಕಟ್ಟೆ ಒಳಗೆ ವಹಿವಾಟು ನಡೆಸಿದರೆ ಶುಲ್ಕ ಪಾವತಿಸಬೇಕಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೃಷಿ ಉತ್ಪನ್ನ ಹಾಗೂ ವಾಣಿಜ್ಯಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಸುಗ್ರಿವಾಜ್ಞೆ ವಾಪಸ್ ಪಡೆಯಲು ಒತ್ತಾಯಿಸಿ ರೈತರು ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿರುವಾಗಲೇ ರಾಜ್ಯ ಸರ್ಕಾರ ರೈತ ಸಂಘಟನೆಗಳು ಹಾಗೂ ಮುಖಂಡರೊಂದಿಗೆ ಚರ್ಚಿಸದೆ, ಏಕಪಕ್ಷೀಯವಾಗಿ ಶುಲ್ಕ ಹೆಚ್ಚಳದ ನಿರ್ಧಾರ ಕೈಗೊಂಡಿದೆ ಎಂದು ಟೀಕಿಸಿದ್ದಾರೆ.

ಮಾರುಕಟ್ಟೆ ಪ್ರಾಂಗಣದ ಒಳಗೆ ಹಾಗೂ ಹೊರಗೆ ವಹಿವಾಟು ನಡೆಸುವ ವರ್ತಕರಿಗೆ ಒಂದೇ ತೆರನಾದ ಶುಲ್ಕ ವಿಧಿಸಬೇಕು.

ಸದ್ಯ ಇರುವ ಮಾರುಕಟ್ಟೆ ಶುಲ್ಕವನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.