ADVERTISEMENT

ಬೀದರ್‌: ಹೆಸರು, ಉದ್ದು ಖರೀದಿ ಕೇಂದ್ರ ಆರಂಭಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2024, 5:27 IST
Last Updated 28 ಆಗಸ್ಟ್ 2024, 5:27 IST
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಬೀದರ್‌ನಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಬೀದರ್‌ನಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು    

ಬೀದರ್‌: ಜಿಲ್ಲೆಯಲ್ಲಿ ಹೆಸರು, ಉದ್ದು ಖರೀದಿ ಕೇಂದ್ರ ತಕ್ಷಣವೇ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.

ಸಂಘದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿ, ಒತ್ತಾಯಿಸಿದರು.

ಜಿಲ್ಲೆಯಲ್ಲಿ ಹೆಸರು ರಾಶಿ ಕೆಲಸ ಪ್ರಾರಂಭಗೊಂಡು ಎರಡು ವಾರಗಳಾಗುತ್ತ ಬಂದಿದೆ. ಇದುವರೆಗೆ ಸರ್ಕಾರದಿಂದ ಹೆಸರು ಖರೀದಿ ಕೇಂದ್ರ ಆರಂಭಿಸಿಲ್ಲ. ಶೇ 50ರಿಂದ 60ರಷ್ಟು ಹೆಸರು ಮಾರುಕಟ್ಟೆಯಲ್ಲಿ ಸಿಕ್ಕ ಬೆಲೆಗೆ ಮಾರಾಟ ಮಾಡಿದ್ದಾರೆ. ಸರ್ಕಾರದ ಎಂಎಸ್‌ಪಿ ಪ್ರಕಾರ ಪ್ರತಿ ಕ್ವಿಂಟಲ್‌ ಹೆಸರು ₹8,682ಕ್ಕೆ ಮಾರಾಟವಾಗಬೇಕು. ಆದರೆ, ₹6 ಸಾವಿರದಿಂದ ₹6,500ಕ್ಕೆ ಮಾರಾಟವಾಗುತ್ತಿದೆ. ಪ್ರತಿ ಕ್ವಿಂಟಲ್‌ಗೆ ₹2 ಸಾವಿರ ವ್ಯತ್ಯಾಸವಾಗುತ್ತಿದೆ. ರೈತರಿಗೆ ತಕ್ಷಣವೇ ಹಣದ ಅಗತ್ಯ ಇರುವುದರಿಂದ ಕಡಿಮೆ ಬೆಲೆಗೆ ಮಾರಾಟ ಮಾಡುವ ಪರಿಸ್ಥಿತಿ ಬಂದೊದಗಿದೆ.ಸರ್ಕಾರದಿಂದ ಖರೀದಿ ಕೇಂದ್ರ ಆರಂಭಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಗೋಳು ತೋಡಿಕೊಂಡರು.

ADVERTISEMENT

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹೀಗಾಗಿದೆ. ಖರೀದಿ ಕೇಂದ್ರ ತೆರೆಯದೇ ಎಂಎಸ್‌ಪಿ ಘೋಷಿಸಿದರೆ ಏನು ಪ್ರಯೋಜನ? ಉದ್ದು, ಸೋಯಾ ಪ್ರದೇಶ ಕೂಡ ಹೆಚ್ಚಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭಿಸಬೇಕು. ಇಲ್ಲವಾದರೆ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ, ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಮುಖಂಡರಾದ ಸುಭಾಷ ರಗಟೆ, ನಾಗಯ್ಯಾ ಸ್ವಾಮಿ, ಶಿವಾನಂದ ಹುಡಗೆ, ಪ್ರವೀಣ ಕುಲಕರ್ಣಿ, ಪ್ರಕಾಶ ಬಾವಗೆ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.