ADVERTISEMENT

ಸವಾಲುಗಳನ್ನು ಸಮರ್ಥವಾಗಿ ಎದುರಿಸಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ

ಚಂದ್ರಕಾಂತ ಶಹಾಬಾದಕರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 12:55 IST
Last Updated 25 ಜೂನ್ 2022, 12:55 IST
ಬೀದರ್‌ನ ಕರ್ನಾಟಕ ಪದವಿ ಕಾಲೇಜು ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
ಬೀದರ್‌ನ ಕರ್ನಾಟಕ ಪದವಿ ಕಾಲೇಜು ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು   

ಬೀದರ್‌: ‘ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಪರಿಶ್ರಮ ಪಟ್ಟು ಓದಿದರೆ ಯಶಸ್ಸು ಹುಡುಕಿಕೊಂಡು ಬರುತ್ತದೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಹೇಳಿದರು.

ನಗರದ ಕರ್ನಾಟಕ ಪದವಿ ಕಾಲೇಜಿನ ವತಿಯಿಂದ ನಡೆದ ಪ್ರಸಕ್ತ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಸಾಧನೆಯ ಮೆಟ್ಟಿಲನ್ನು ಏರುವ ತುಡಿತ ಇರಬೇಕು. ಕಲಿಕೆಯಲ್ಲಿ ಹಿಂದುಳಿಯುತ್ತಿರುವುದು ಮನವರಿಕೆಯಾದರೆ ಮರಳಿ ಯತ್ನ ಮಾಡಬೇಕು. ಇದರಿಂದ ಸಾಧನೆಯ ದಾರಿ ಸುಲಭವಾಗುತ್ತದೆ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಾತನಾಡಿ,‘ಶಿಕ್ಷಣದ ಮೂಲಕ ಎಲ್ಲ ಬಗೆಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ’ ಎಂದು ಹೇಳಿದರು.

ಇದು ಸ್ಪರ್ಧಾತ್ಮಕ ಯುಗ. ಸಾಧನೆಯ ಹಾದಿ ಸುಗಮವಲ್ಲ. ಇಲ್ಲಿ ಛಲವಿದ್ದವರು ಮಾತ್ರ ಗುರಿ ತಲುಪಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಅವಕಾಶಗಳಿಲ್ಲವೆಂದು ಕೈಕಟ್ಟಿ ಕೂಡದೆ ಇರುವ ವ್ಯವಸ್ಥೆಯಲ್ಲಿ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು. ಪರಿಶ್ರಮದೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಬೇಕು ಎಂದು ಸಲಹೆ ನೀಡಿದರು.

ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ. ಶೆಟಕಾರ, ಕರ್ನಾಟಕ ಪದವಿ ಕಾಲೇಜಿನ ಉಪ ಪ್ರಾಚಾರ್ಯ ಮಲ್ಲಿಕಾರ್ಜುನ ಹಂಗರಗಿ ಮಾತನಾಡಿದರು.

ಸಂಸ್ಥೆಯ ಕಾರ್ಯದರ್ಶಿಗಳಾದ ಸಿದ್ರಾಮ ಪಾರಾ, ಜಂಟಿ ಕಾರ್ಯದಶಿಗಳಾದ ಸತೀಶ ಪಾಟೀಲ, ಆಡಳಿತ ಮಂಡಳಿಯ ನಿರ್ದೇಶಕರಾದ ಮಹೇಶಕುಮಾರ ಭದಭದೆ, ಚಂದಾ ಶಾಂತಕುಮಾರ, ಶೆಟಕಾರ ಚಂದ್ರಕಾಂತ, ವೀರಭದ್ರಪ್ಪ ಬುಯ್ಯಾ, ವಿಜಯಕುಮಾರ ಬಿರಾದಾರ ಗೂನಳ್ಳಿ, ಗಾದಗಿ ಶಿವಾನಂದ, ಸಿದ್ರಾಜ ಪಾಟೀಲ, ರವಿ ಹಾಲಹಳ್ಳಿ ಹಾಗೂ ಶ್ರೀನಾಥ ನಾಗೂರೆ ಇದ್ದರು.

ಜಿಲ್ಲೆಗೆ ಮೊದಲ, ಮೂರನೇಯ, ಐದು, ಏಳು ಹಾಗೂ ಎಂಟನೇಯ ರ್‍ಯಾಂಕ್‌ ಪಡೆದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೇರಿದಂತೆ ಕಲಾ, ವಿಜ್ಞಾನ ವಿಭಾಗಗಳಲ್ಲಿ ಅಗ್ರಶ್ರೇಣಿ ಪಡೆದ 41 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯ ಬಸವರಾಜ ಬಲ್ಲೂರ ಸ್ವಾಗತಿಸಿದರು. ಸಚಿನ್‌ ವಿಶ್ವಕರ್ಮ ನಿರೂಪಿಸಿದರು. ಮಂಗಲಾ ಗಡಮಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.