ಬೀದರ್: ಮಕ್ಕಳಲ್ಲಿ ಕ್ರಿಯಾಶೀಲತೆ, ಸೃಜನಶೀಲತೆ ಹಾಗೂ ವೈಜ್ಞಾನಿಕ ಚಿಂತನೆ ಕೌಶಲ ಬೆಳೆಸಬೇಕು ಎಂದು ಪಶು ವೈದ್ಯಕೀಯ ಮಹಾವಿದ್ಯಾಲಯದ ಸ್ನಾತಕೋತ್ತರ ಶಿಕ್ಷಣ ನಿರ್ದೇಶಕ ಡಾ.ಎಂ.ಕೆ. ತಾಂದಳೆ ಹೇಳಿದರು.
ನಗರದ ನೌಬಾದ್ನ ಹಿಮಾಲಯ ಕಾನ್ವೆಂಟ್ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ವಿಜ್ಞಾನದ ಕುತೂಹಲ ಇರಬೇಕು. ಅಂದಾಗ ಮಾತ್ರ ಕಲಿಕೆ ಹಾಗೂ ಹೊಸ ಹೊಸ ಸಂಶೋಧನೆಗಳಿಗೆ ಪ್ರೇರಣೆ ದೊರೆಯುತ್ತದೆ ಎಂದರು.
ಸಮಗ್ರ ಶಿಕ್ಷಣ ಕರ್ನಾಟಕದ ಸಹಾಯಕ ಯೋಜನಾ ಸಮನ್ವಯಾಧಿ ಕಾರಿ ಗುಂಡಪ್ಪ ಹುಡಗೆ, ಜಿಲ್ಲಾ ಶಿಕ್ಷಣ ಸಂಯೋಜಕ ಸಂಜೀವಕುಮಾರ ಸ್ವಾಮಿ ಮಾತನಾಡಿದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕಾರ್ಯಕಾರಿಣಿ ಮಂಡಳಿ ಸದಸ್ಯ ಪ್ರಕಾಶ ಲಕ್ಕಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಾದ ರಾಮೇಶ್ವರ, ಅಂಜಲಿ, ಸೇವಂತಿ, ಭಾಗ್ಯಶ್ರೀ ಮತ್ತು ಧನಲಕ್ಷ್ಮಿ ಅವರನ್ನು ಸನ್ಮಾನಿಸಲಾಯಿತು.
ರಾಷ್ಟ್ರೀಯ ವಿಜ್ಞಾನ ಸಮಾವೇಶದ ಜಿಲ್ಲಾ ಸಂಯೋಜಕ ಮಂಜುನಾಥ ಬೆಳಕೇರೆ, ಅರವಿಂದ ಕುಲಕರ್ಣಿ, ಡಾ.ಶ್ರೇಯಾ ಮಹೇಂದ್ರಕರ್, ಶ್ರೀದೇವಿ ಹೂಗಾರ, ಅನಂತ ಕುಲಕರ್ಣಿ, ಡಾ.ನೈಜದೀಪ ರಗಟೆ, ರಾಜಕುಮಾರ ಬಿರಾದಾರ, ಶಿವಕುಮಾರ ಬಿರಾದಾರ ಇದ್ದರು.
ವಿಜ್ಞಾನ ಶಿಕ್ಷಕರ ವೇದಿಕೆಯ ಜಿಲ್ಲಾ ಘಟಕ, ನ್ಯೂ ಮದರ್ ತೆರೆಸಾ ನಗರ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ಕರ್ನಾಟಕ ಜಾಗೃತಿ ವೇದಿಕೆಯ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.