ಬೀದರ್: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ, ಪ್ರವಾಸೋದ್ಯಮ ಸಚಿವ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇತರ ಅಧಿಕಾರಿಗಳಿಗೆ ಅವರು ಈ ಕುರಿತು ಮನವಿಪತ್ರ ಸಲ್ಲಿಸಿದ್ದಾರೆ.
ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಕೈಗಾರಿಕೆಗಳು ಇಲ್ಲ. ಅನೇಕ ಐತಿಹಾಸಿಕ ಹಾಗೂ ಧಾರ್ಮಿಕ ತಾಣಗಳು ಇವೆ. ಪ್ರವಾಸೋದ್ಯಮಕ್ಕೆ ಬಹಳಷ್ಟು ಅವಕಾಶಗಳು ಇವೆ. ಹೀಗಾಗಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕಾಳಜಿ ತೋರಬೇಕಿದೆ ಎಂದು ಹೇಳಿದ್ದಾರೆ.
ಜಿಲ್ಲೆಯ ಕೋಟೆಗಳು ಹಾಗೂ ಐತಿಹಾಸಿಕ ಸ್ಮಾರಕಗಳ ವೀಕ್ಷಣೆಗೆ ದೇಶ, ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ಆದರೆ, ಪ್ರವಾಸಿ ಮಾರ್ಗದರ್ಶಿ, ಅಂತರರಾಷ್ಟ್ರೀಯ ಮಟ್ಟದ ಹೋಟೆಲ್ಗಳು ಇಲ್ಲ. ಪ್ರವಾಸಿ ತಾಣಗಳಲ್ಲಿ ಸುರಕ್ಷತೆ ಕೊರತೆಯೂ ಇದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರವಾಸೋದ್ಯಮ ಅಭಿವೃದ್ಧಿಗೆ ಜಿಲ್ಲಾಡಳಿತ ಸಲ್ಲಿಸಿರುವ ₹265 ಕೋಟಿ ಪ್ರಸ್ತಾವಕ್ಕೆ ಅನುಮೋದನೆ ನೀಡಿ, ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅನುದಾನ ಕಲ್ಪಿಸಬೇಕು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಉನ್ನತೀಕರಿಸಿ, ಸಿಬ್ಬಂದಿ ಸಂಖ್ಯೆ ಹೆಚ್ಚಿಸಬೇಕು. ಪ್ರವಾಸಿ ಮಾರ್ಗದರ್ಶಿಗಳನ್ನು ನೇಮಕ ಮಾಡಬೇಕು. ಬೀದರ್ನ ಭೂ ಕಾಲುವೆ, ಕಾರಂಜಾ ಜಲಾಶಯದ ಉದ್ಯಾನ, ದೇವ ದೇವ ವನ ಅಭಿವೃದ್ಧಿಪಡಿಸಬೇಕು. ಪ್ರವಾಸಿ ತಾಣಗಳಲ್ಲಿ ಪೊಲೀಸ್ ಔಟ್ಪೋಸ್ಟ್ ಸ್ಥಾಪಿಸಬೇಕು. ಪ್ರವಾಸಿಗರಿಗೆ ಜಿಲ್ಲೆಯ ಎಲ್ಲ ತಾಣಗಳ ಭೇಟಿಗೆ ವಾಹನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.