ಹುಲಸೂರ: 2025-26ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ತಾಲ್ಲೂಕಿನ ಧನ್ನೂರ ಗ್ರಾಮದಲ್ಲಿ ಈಚೆಗೆ ನಡೆಸಲಾಯಿತು.
ಕೃಷಿ ವಿಜ್ಞಾನ ಕೇಂದ್ರ ಬೀದರ್, ಕೃಷಿ ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ನಡೆದ ಅಭಿಯಾನದಲ್ಲಿ ಬೀಜೋಪಚಾರ, ಸುಧಾರಿತ ತಳಿಗಳು, ತೋಟಗಾರಿಕೆ ಬೆಳೆಗಳು, ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಕೃಷಿ ಯಂತ್ರೋಪಕರಣಗಳು, ಸಮಗ್ರ ಕೃಷಿ ಪದ್ಧತಿಗಳ ಕುರಿತಾಗಿ ರೈತರಿಗೆ ತರಬೇತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಆರ್. ಎಲ್. ಜಾಧವ್ ಅವರು ಮುಂಗಾರು ಹಂಗಾಮಿಗೆ ಅಧುನಿಕ ಕೃಷಿ ತಾಂತ್ರಿಕತೆಗಳ ಬಗ್ಗೆ, ಮಣ್ಣು ಆರೋಗ್ಯ ಚೀಟಿಯ ಆಧಾರದ ಮೇಲೆ ಸೂಕ್ತ ಬೆಳೆಗಳನ್ನು ಆಯ್ಕೆ ಮಾಡುವ ಬಗ್ಗೆ, ಸಮತೋಲನ ರಾಸಾಯನಿಕ ಗೊಬ್ಬರ ಬಳಕೆಯ ಬಗ್ಗೆ ಮಾಹಿತಿ ನೀಡಿದರು.
ಬೀದರ್ ಕೃಷಿ ವಿಜ್ಞಾನಿಗಳು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಕೃಷಿ ಸಖಿಯರು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು, ಪಶುಸಖಿಯರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ರೈತ ಮುಖಂಡರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಯೋಜನೆಗಳ ಬಗ್ಗೆ ಹಸ್ತಪ್ರತಿಗಳನ್ನು ವಿತರಿಸಲಾಯಿತು.
ವಿಜ್ಞಾನಿಗಳಾದ ಡಾ. ಚಂದ್ರಶೇಖರ್, ಬಸವಪ್ರಭು, ಅಶೋಕ್ ಸಜ್ಜನ್ , ಡಾ. ಭಾರತಿ ಅವರು ತೋಟಗಾರಿಕೆ, ಸಿರಿಧಾನ್ಯ, ಪಶು ಪೋಷಣೆ ಮತ್ತು ಹೈನುಗಾರಿಕೆ ಬಗ್ಗೆ ಮಾಹಿತಿ ನೀಡಿದರು. ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ಮಹೇಶ್ ಪಾಟೀಲ್ ಮತ್ತು ನಾಗನಾಥ್ ಹಲಿಂಗೆ ಸೇರಿ ಹುಲಸೂರ ತಾಲ್ಲೂಕಿನ ಒಟ್ಟು 6 ಗ್ರಾಮಗಳ 150ಕ್ಕೂ ಹೆಚ್ಚು ಮಂದಿ ರೈತರು ಹಾಗೂ ರೈತ ಮಹಿಳೆಯರು ಅಭಿಯಾನದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.