ಜನವಾಡ: ಬೀದರ್ ತಾಲ್ಲೂಕಿನ ನಾಗೂರಾ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅರ್ಹರಿಗೆ ಸ್ಥಳದಲ್ಲೇ ಮಾಸಾಶನ ಸೇರಿದಂತೆ ವಿವಿಧ ಸೌಲಭ್ಯಗಳ ಮಂಜೂರಾತಿ ಆದೇಶ ಪತ್ರ ನೀಡಲಾಯಿತು.
26 ಮಂದಿಗೆ ವಿಧವಾ, ಅಂಗವಿಕಲ, ವೃದ್ಧಾಪ್ಯ ವೇತನ, 8 ಬಿಪಿಎಲ್ ಕಾರ್ಡ್, 14 ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್ ಹಾಗೂ 5 ಫಲಾನುಭವಿಗಳಿಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಜಾಬ್ ಕಾರ್ಡ್ ವಿತರಿಸಲಾಯಿತು.
ಜೆಸ್ಕಾಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ರಾಜ್ ಇಲಾಖೆ ಹಾಗೂ ಕೃಷಿ ಇಲಾಖೆಗೆ ಸಂಬಂಧಿಸಿದ 10 ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
ಎಲ್ಲ ಇಲಾಖೆಗೆ ಸಂಬಂಧಿಸಿದ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸಲು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಮನವರಿಕೆ ಮಾಡಿದರು. ಜಿಲ್ಲಾಧಿಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ.
ಶಾಸಕ ಬಂಡೆಪ್ಪ ಕಾಶೆಂಪೂರ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಉಪ ವಿಭಾಗಾಧಿಕಾರಿ ಮಹಮ್ಮದ್ ನಯೀಮ್ ಮೊಮಿನ್, ತಹಶೀಲ್ದಾರ್ ಅಣ್ಣಾರಾವ್ ಪಾಟೀಲ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಬಾಬುರೆಡ್ಡಿ ಸೇರಿದಂತೆ ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆ ಹಾಗೂ ಅಹವಾಲುಗಳನ್ನು ಆಲಿಸಿದರು.
ಕಾರ್ಯಕ್ರಮದಲ್ಲಿ ಅಚ್ಚುಕಟ್ಟಾಗಿ ಆಯಾ ಇಲಾಖೆಗೆ ಸಂಬಂಧಿಸಿದ ಟೇಬಲ್ಗಳನ್ನು ಹಾಕಲಾಗಿತ್ತು. ಸಾರ್ವಜನಿಕರು ಒಬ್ಬೊಬ್ಬರಾಗಿ ಅರ್ಜಿ ಸಲ್ಲಿಸಿ, ತಮ್ಮ ಅಹವಾಲು ಸಲ್ಲಿಸಿದರು.
ಪಾವನಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಭಾವತಿ, ಉಪಾಧ್ಯಕ್ಷ ಶಿವಕಾಂತ, ಪಿಡಿಒ ಗಾಯತ್ರಿದೇವಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.