ADVERTISEMENT

ಬೀದರ್‌ | ಉಸ್ತುವಾರಿ ಸಚಿವರಿಂದ ಅಧಿಕಾರ ದುರ್ಬಳಕೆ: ಸೋಮನಾಥ ಪಾಟೀಲ ಆರೋಪ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2024, 15:08 IST
Last Updated 3 ಮಾರ್ಚ್ 2024, 15:08 IST
ಸೋಮನಾಥ ಪಾಟೀಲ 
ಸೋಮನಾಥ ಪಾಟೀಲ    

ಬೀದರ್‌: ‘ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ ಗಂಭೀರವಾಗಿ ಆರೋಪಿಸಿದ್ದಾರೆ.

ಈ ಕುರಿತು ಭಾನುವಾರ ಮಾಧ್ಯಮಗಳಿಗೆ ಪ್ರಕಟಣೆ ಹೊರಡಿಸಿರುವ ಅವರು, ಮಾ.7ರಂದು ಬಸವಕಲ್ಯಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.‌ ಮಠಾಧೀಶರ ಒಕ್ಕೂಟ ಹಾಗೂ ಬಸವಪರ ಸಂಘಟನೆಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ನಮ್ಮದೇನೂ ತಕರಾರಿಲ್ಲ. ಆದರೆ, ಈ ಕುರಿತ ಪೂರ್ವಭಾವಿ ಸಭೆಯಲ್ಲಿ ಡಿಸಿ, ಎಸ್ಪಿ ಸೇರಿದಂತೆ ಅಧಿಕಾರಿಗಳ ದಂಡೇ ಪಾಲ್ಗೊಂಡಿರುವುದು ಸೋಜಿಗದ ಸಂಗತಿ. ಸಚಿವರು ಒತ್ತಡ ಹೇರಿ ಆಡಳಿತವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದನ್ನು ಪುಷ್ಟೀಕರಿಸುತ್ತದೆ ಎಂದು ಆರೋಪ ಮಾಡಿದ್ದಾರೆ.

ಈಗ ಚುನಾವಣೆ ಸಮಯ. ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಇರಬೇಕು. ವಿಶೇಷವಾಗಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಆಗಿದ್ದು, ಚುನಾವಣೆ ಸಮಯದಲ್ಲಿ ಎಂತಹ ವೇದಿಕೆ ಹಂಚಿಕೊಳ್ಳಬೇಕು ಎಂಬ ಅರಿವು ಅಧಿಕಾರಿಗಳು ಹೊಂದಿರಬೇಕು ಎಂದಿದ್ದಾರೆ.

ADVERTISEMENT

ಅನುಭವ ಮಂಟಪ ಕಾಮಗಾರಿಗೆ ₹200 ಕೋಟಿ ಅನುದಾನ ಹಿಂದಿನ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದೆ. ಅದರಲ್ಲೇ ಕಾಮಗಾರಿ ನಡೆಯುತ್ತಿದೆ. ಕಾಂಗ್ರೆಸ್  ಸರ್ಕಾರ ಬಂದ ನಂತರ ನಯಾಪೈಸೆ ಹಣ ಬಿಡುಗಡೆ ಆಗಿಲ್ಲ ಎಂದು ಶಾಸಕ ಶರಣು ಸಲಗರ ಹೇಳಿರುವುದರಲ್ಲಿ ತಪ್ಪೇನಿದೆ? ಹಣ ಬಿಡುಗಡೆ ಆಗಿದ್ದರೆ ಸಚಿವ ಖಂಡ್ರೆಯವರು ಬಹಿರಂಗಪಡಿಸಲಿ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.