ಬೀದರ್: ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸಲು ಪಣ ತೊಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.
ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಒದಗಿಸುತ್ತಿರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ವೈಯಕ್ತಿಕವಾಗಿ ಸನ್ಮಾನಿಸಿ ಮಾತನಾಡಿದ ಅವರು, ಜಿಲ್ಲಾ ಆಡಳಿತ ಹಾಗೂ ಆರೋಗ್ಯ ಇಲಾಖೆ ಈ ದಿಸೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.
ಕೋವಿಡ್ ಸೋಂಕಿತರಿಗೆ ಬ್ರಿಮ್ಸ್ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅದರ ಫಲವಾಗಿಯೇ ಹೆಚ್ಚಿನ ಪ್ರಮಾಣದಲ್ಲಿ ರೋಗಿಗಳು ಗುಣಮುಖರಾಗಿ ಮನೆಗೆ ಮರಳುತ್ತಿದ್ದಾರೆ ಎಂದು ಹೇಳಿದರು.
ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯವರಲ್ಲಿ ಆತ್ಮಸ್ಥೈರ್ಯ ತುಂಬುವುದು ಎಲ್ಲರ ಕರ್ತವ್ಯ. ಹೀಗಾಗಿ ವೈಯಕ್ತಿಕವಾಗಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದೇನೆ ಎಂದು ತಿಳಿಸಿದರು.
ಸದ್ಯ 100 ಜನ ಕೋವಿಡ್ ವಾರಿಯರ್ಗಳಿಗೆ ಸನ್ಮಾನಿಸಲಾಗಿದೆ. ಮುಂದೆ ಉಳಿದವರನ್ನೂ ಸನ್ಮಾನಿಸ ಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ಬ್ರಿಮ್ಸ್ ನಿರ್ದೇಶಕ, ವೈದ್ಯಕೀಯ ಅಧೀಕ್ಷಕ, ನೋಡಲ್ ಅಧಿಕಾರಿ, ಜಿಲ್ಲಾ ಶಸ್ತ್ರಚಿಕಿತ್ಸಕ,ವೈದ್ಯರು, ನರ್ಸ್ಗಳು, ಆಂಬುಲನ್ಸ್ ಚಾಲಕರು, ಸ್ವ್ಯಾಬ್ ಸಂಗ್ರಹ ಸಿಬ್ಬಂದಿ, ಪರೀಕ್ಷಾ ತಂತ್ರಜ್ಞರು, ಗ್ರುಪ್ ಡಿ ನೌಕರರು, ಭದ್ರತಾ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಉಪ ವಿಭಾಗಾಧಿಕಾರಿಗಳಾದ ಭುವನೇಶ ಪಾಟೀಲ, ಗರಿಮಾ ಪನ್ವಾರ್, ಮುಖಂಡರಾದ ಗುರುನಾಥ ಜ್ಯಾಂತಿಕರ್, ಅಶೋಕ ಹೊಕ್ರಾಣೆ, ಶಶಿಧರ ಹೊಸಳ್ಳಿ, ಹಣಮಂತ ಬುಳ್ಳಾ, ಸಂಗಮೇಶ, ಸುನಿಲ್ ಗೌಳಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.